ಗೋಹತ್ಯೆ ಸಂಪೂರ್ಣ ನಿಷೇಧ: ಕೇಂದ್ರಕ್ಕೆ ನಿರ್ದೇಶಿಸಲು ದೆಹಲಿ ಹೈಕೋರ್ಟ್ ನಿರಾಕರಣೆ
ನವದೆಹಲಿ: ಗೋವು ಮತ್ತು ಅದರ ಸಂತತಿಯ ಹತ್ಯೆಯನ್ನು ಸಂಪೂರ್ಣ ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದ್ದು, ಈ ವಿಚಾರದಲ್ಲಿ ಸಂಬಂಧಿತ ರಾಜ್ಯ ಸರ್ಕಾರವನ್ನು ಸಂಪರ್ಕಿಸಬಹುದು ಎಂದು ಹೇಳಿದೆ. ಬೃಷ್ಭನ್ ವರ್ಮಾ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸತೀಶ್ಚಂದ್ರ ಶರ್ಮಾ ಅವರ ನೇತೃತ್ವದ ಪೀಠವು, ರಾಷ್ಟ್ರ ರಾಜಧಾನಿಯಲ್ಲಿ ಗೋಹತ್ಯೆಗೆ ನಿಷೇಧ ಹೇರಿರುವ ಕಾನೂನು ಅನ್ನು ಇಲ್ಲಿನ ಸರ್ಕಾರವು ಜಾರಿಗೆ ತಂದಿದೆ ಎಂಬುದರತ್ತ ಗಮನ ಸೆಳೆಯಿತು. ಇತರ ರಾಜ್ಯಗಳಿಗೆ ಸಂಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಲು ಅರ್ಜಿದಾರರಿಗೆ ಸ್ವಾತಂತ್ರ್ಯ ಇದೆ. ನಿರ್ದಿಷ್ಟ ಕಾನೂನು ಜಾರಿಗೆ ತರುವಂತೆ ಶಾಸಕಾಂಗಕ್ಕೆ ಒತ್ತಾಯಿಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಸಂಜೀವ್ ನರುಲಾ ಅವರೂ ಇದ್ದ ಪೀಠ ಹೇಳಿದೆ. ‘ಇಂಥ ತೀರ್ಮಾನಗಳನ್ನು ಶಾಸಕಾಂಗ ಮಾತ್ರ ತೆಗೆದುಕೊಳ್ಳಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಸುಪ್ರೀಂ ಕೋರ್ಟ್, ನಿರ್ದಿಷ್ಟ ಕಾನೂನು ರೂಪಿಸಲು ಶಾಸಕಾಂಗವನ್ನು ಒತ್ತಾಯಿಸಲು ಸಾಧ್ಯವಿಲ್ಲವೆಂದು ಹೇಳಿದೆ. ದೆಹಲಿ ಸರ್ಕಾರದ ಪರವಾಗಿ ಹಾಜರಾಗಿದ್ದ ವಕೀಲ ಸಂತೋಷ್ ಕುಮಾರ್ ತ್ರಿಪಾಠಿ, ರಾಷ್ಟ್ರ ರಾಜಧಾನಿಯಲ್ಲಿ ಗೋಹತ್ಯೆ ಸಂಪೂರ್ಣ ನಿಷೇಧ ಕಾನೂನು ಜಾರಿಯಲ್ಲಿದೆ ಎಂದು ಸ್ಪಷ್ಟಪಡಿಸಿದರು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.