ನವದೆಹಲಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ 76ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಮೋದಿಯವರ ಜನ್ಮದಿನ ಹಾಗೂ ಸಾರ್ವಜನಿಕ ಜೀವನದಲ್ಲಿ 25 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ, ಬಿಜೆಪಿ ವತಿಯಿಂದ ದೇಶಾದ್ಯಂತ ಒಂದು ತಿಂಗಳ ಕಾಲ ‘ಸೇವಾ ಸಂಕಲ್ಪ’ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
ಈ ಅಭಿಯಾನದ ಭಾಗವಾಗಿ ದೇಶಾದ್ಯಂತ ಸರ್ಕಾರಿ ಯೋಜನೆಗಳ ಕುರಿತು ಜಾಗೃತಿ, ರಕ್ತದಾನ ಶಿಬಿರಗಳು, ಸ್ವಚ್ಛತಾ ಕಾರ್ಯಕ್ರಮಗಳು ಹಾಗೂ ಸಂವಾದ ಯಾತ್ರೆಗಳು ಸೇರಿದಂತೆ ಹಲವು ಸಾರ್ವಜನಿಕ ಸೇವಾ ಕಾರ್ಯಕ್ರಮಗಳು ಜರುಗಲಿವೆ. ಇದರ ಜೊತೆಗೆ ಮೋದಿಯವರ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸಲು ‘ಆಶೀರ್ವಾದದ ದೀಪ’ ಬೆಳಗುವ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರು ತಮ್ಮ ಮನೆಗಳಲ್ಲಿ ದೀಪ ಬೆಳಗುವಂತೆ ಕರೆ ನೀಡಲಾಗಿದೆ.
ರಾಜ್ಯದಲ್ಲೂ ಈ ಅಭಿಯಾನಕ್ಕೆ ಚಾಲನೆ ನೀಡಲು ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ನಿರ್ಮಲಾ ಸೀತಾರಾಮನ್ ಬೆಂಗಳೂರಿಗೆ ಆಗಮಿಸಿದ್ದು, ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸುವ ಜೊತೆಗೆ ಗಣೇಶೋತ್ಸವ ಕಾರ್ಯಕ್ರಮಗಳಲ್ಲೂ ಪಾಲ್ಗೊಂಡಿದ್ದಾರೆ.