ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ದಾಸರಕಲ್ಲಹಳ್ಳಿ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಅಣ್ಣನೇ ಕುಡುಗೋಲಿನಿಂದ ಥಳಿಸಿ ತಮ್ಮನನ್ನು ಕೊಲೆ ಮಾಡಿದ್ದಾನೆ.
ಸಂತೋಷ್(40) ಕೊಲೆಯಾದ ವ್ಯಕ್ತಿ. ಆರೋಪಿ ರಮೇಶ್(48) ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ. ಸಂತೋಷ್ ರಮೇಶ್ ಸೇರಿ ಮೂವರು ಸಹೋದರರಿದ್ದು, ಕೂಲಿ ಕೆಲಸ ಮಾಡಿಕೊಂಡಿದ್ದಾರೆ. ಸಂತೋಷ್ ಗೆ ಪತ್ನಿ ಇಬ್ಬರು ಮಕ್ಕಳಿದ್ದು ವೈಮನಸ್ಸಿನ ಕಾರಣ ದೂರ ಉಳಿದಿದ್ದರು.
ಆಸ್ತಿ ಮತ್ತು ಸಂಸಾರದ ವಿಚಾರವಾಗಿ ತಮ್ಮ ಸಂತೋಷನಿಗೆ ರಮೇಶ್ ಬೈದಾಡಿದ್ದಾನೆ. ಈ ವೇಳೆ ಇಬ್ಬರ ನಡುವೆ ಜಗಳವಾಗಿದೆ. ಪ್ರತಿ ಗೆದ್ದ ರಮೇಶ್ ಕುಡುಗೋಲಿನಿಂದ ಸಂತೋಷ್ ಬೆನ್ನು, ತೊಡೆ, ಮುಖಕ್ಕೆ ಬಲವಾಗಿ ಥಳಿಸಿದ್ದಾನೆ. ಇದರಿಂದ ತೀವ್ರ ರಕ್ತಸ್ರಾವಕ್ಕೊಳಗಾಗಿ ಅಸ್ಪಸ್ಥಗೊಂಡ ಸಂತೋಷ್ ನನ್ನು ಹೊಳೆಹೊನ್ನೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.