ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ‘ಅನ್ನಭಾಗ್ಯ’ ಯೋಜನೆಯಡಿ ನೀಡಲಾಗುತ್ತಿದ್ದ ಆಗಸ್ಟ್ ತಿಂಗಳ ಅಕ್ಕಿ ವಿತರಣೆಗೆ ದಿಢೀರ್ ತಡೆ ಬಿದ್ದಿದ್ದು, ಕಾರ್ಡ್ದಾರರಿಗೆ ಪೂರ್ಣ ಪ್ರಮಾಣದ ಪಡಿತರ ಸಿಗದೆ ನಿರಾಸೆ ಮೂಡಿಸಿದೆ.
ಸಾಮಾನ್ಯವಾಗಿ ರಾಜ್ಯ ಸರ್ಕಾರವು ಪ್ರತಿ ಫಲಾನುಭವಿಗೆ 10 ಕೆಜಿ ಅಕ್ಕಿ ವಿತರಿಸುತ್ತಿತ್ತು. ಆದರೆ ಪ್ರಸ್ತುತ ಆಗಸ್ಟ್ ತಿಂಗಳಲ್ಲಿ ಅನ್ನಭಾಗ್ಯ ಅಕ್ಕಿ ವಿತರಣೆಯನ್ನು ಸಂಪೂರ್ಣವಾಗಿ ನಿಲ್ಲಿಸಲಾಗಿದ್ದು, ಕೇಂದ್ರ ಸರ್ಕಾರದ ಪಾಲಿನ ಆಹಾರ ಧಾನ್ಯವನ್ನು ಮಾತ್ರ ನೀಡಲಾಗುತ್ತಿದೆ.
ಕೇಂದ್ರದ ಪಾಲು ಮಾತ್ರ ವಿತರಣೆ: ಪ್ರಸ್ತುತ ನ್ಯಾಯಬೆಲೆ ಅಂಗಡಿಗಳಲ್ಲಿ ಕೇಂದ್ರ ಸರ್ಕಾರದ ಕೋಟಾದಡಿ 4 ಕೆಜಿ ಅಕ್ಕಿ ಹಾಗೂ 6 ಕೆಜಿ ರಾಗಿಯನ್ನು ಮಾತ್ರ ಗ್ರಾಹಕರಿಗೆ ವಿತರಿಸಲಾಗುತ್ತಿದೆ. ರಾಜ್ಯ ಸರ್ಕಾರದ ಪಾಲಿನ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ವಿತರಣೆಯನ್ನು ಏಕೆ ನಿಲ್ಲಿಸಲಾಗಿದೆ ಎಂಬ ಬಗ್ಗೆ ಸಾರ್ವಜನಿಕರಲ್ಲಿ ಭಾರೀ ಪ್ರಶ್ನೆ ಹಾಗೂ ಅಸಮಾಧಾನ ವ್ಯಕ್ತವಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಮಲ್ಲೇಶ್ವರಂ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿ ಮಾಲೀಕರು, ಪ್ರಸ್ತುತ ಕೇಂದ್ರದ ಪಾಲಿನ ಅಕ್ಕಿ ಮತ್ತು ರಾಗಿ ವಿತರಣೆ ನಡೆಯುತ್ತಿದ್ದು, ಮುಂದಿನ ತಿಂಗಳಿಂದ ಎಂದಿನಂತೆ ಅನ್ನಭಾಗ್ಯ ಯೋಜನೆಯ 10 ಕೆಜಿ ಅಕ್ಕಿ ಪಡಿತರದಾರರಿಗೆ ತಲುಪಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.