ನವದೆಹಲಿ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ 108 ಕ್ಷೇತ್ರಗಳಲ್ಲಿ ಗೆದ್ದು ಅತಿ ದೊಡ್ದ ಪಕ್ಷವಾಗಿ ಹೊರಹೊಮ್ಮಿದರೂ ಕಾಂಗ್ರೆಸ್ ಬೆಂಬಲವಿದ್ದರೂ ಸ್ಪಷ್ಟ ಬಹುಮತವಿಲ್ಲದ ಕಾರಣ ಸರ್ಕಾರ ರಚನೆಗೆ ಹೆಣಗಡುವ ಸ್ಥಿತಿ ನಿರ್ಮಾಣವಾಗಿದೆ. ಮತ್ತೊಂದೆಡೆ ಡಿಎಂಕೆ-ಎಐಎಡಿಎಂಕೆ ಪಕ್ಷಗಳು ಮೈತ್ರಿಯೊಂದಿಗೆ ಸರ್ಕಾರ ರಚನೆಗೆ ಯತ್ನ ನಡೆಸಿವೆ. ತಮಿಳುನಾಡಿನಲ್ಲಿ ಯಾವ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂಬುದೇ ಭಾರಿ ಚರ್ಚೆಗೆ ಕಾರಣವಾಗಿದೆ.
ಈ ಬೆಳವಣಿಗೆ ನಡುವೆಯೇ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಸ್.ಸಂತೋಷ್ ಮಾಡಿರುವ ಟ್ವೀಟ್ ತೀವ್ರ ಕುತೂಹಲ ಕೆರಳಿಸಿದೆ. ತಮಿಳುನಾಡಿನಲ್ಲಿ ಯಾರು ಸರ್ಕಾರ ರಚನೆ ಮಾಡುತ್ತಾರೆ ಎಂಬುದನ್ನು ಕಾಲವೇ ನಿರ್ಣಯಿಸುತ್ತದೆ. ಆದರೆ ಒಂದು ವಿಚಾರವಂತೂ ಸ್ಪಷ್ಟ. ಕೊನೆಯಲ್ಲಿ ಕಾಂಗ್ರೆಸ್ ಮುಖಕ್ಕೆ ಮೊಟ್ಟೆಯಲ್ಲಿ ಹೊಡೆಸಿಕೊಂಡಂತಾಗುತ್ತೆ ಎಂದು ಟಾಂಗ್ ನೀಡಿದ್ದಾರೆ. ಈ ಮೂಲಕ ಟಿವಿಕೆಗೆ ಬೆಂಬಲ ಘೋಷಿಸಿರುವ ಕಾಂಗ್ರೆಸ್ ನ್ನು ಟಿಕಿಸಿದ್ದಾರೆ.
ತಮಿಳುನಾಡಿನಲ್ಲಿ ಅತಂತ್ರ ಫಲಿತಾಂಶ ಬಂದಿರುವುದರಿಂದ ಸರ್ಕಾರ ರಚನೆ ಕಗ್ಗಂಟಾಗಿದೆ. 108 ಸ್ಥಾನಗಳೊಂದಿಗೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ವಿಜಯ್ ಅವರ ಟಿವಿಕೆ ಪಕ್ಷಕ್ಕೆ ಬಹುಮತ ಸಿಗದ ಕಾರಣ ಸರ್ಕಾರ ರಚನೆಗೆ ರಾಜ್ಯಪಾಲರು ಅನುಮತಿ ನೀಡುತ್ತಿಲ್ಲ. ಇನ್ನೊಂದೆಡೆ, ತನ್ನ ಬದ್ಧ ವೈರಿ ಡಿಎಂಕೆ ಜೊತೆ ಕೈ ಜೋಡಿಸಿ ಸರ್ಕಾರ ರಚನೆಗೆ ಎಐಎಡಿಎಂಕೆ ಯತ್ನಿಸುತ್ತಿದ್ದು, ಇದಕ್ಕೆ ಪೂರಕವೆಂಬಂತೆ ರೆಸಾರ್ಟ್ ಪೊಲಿಟಿಕ್ಸ್ ಕೂಡ ಶುರುವಾಗಿದೆ. ಹೀಗಾಗಿ ತಮಿಳುನಾಡಿನಲ್ಲಿ ಯಾರು ಸರ್ಕಾರ ರಚನೆ ಮಾಡಲಿದ್ದಾರೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.