ಬೆಂಗಳೂರು: ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಬಿಟ್ಕಾಯಿನ್ (Bitcoin) ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಆರೋಪಿಗಳಾದ ಹ್ಯಾಕರ್ ಶ್ರೀಕಿ ಅಲಿಯಾಸ್ ಶ್ರೀಕೃಷ್ಣ ಹಾಗೂ ರಾಬಿನ್ ಖಂಡೇವಾಲ ಅವರಿಗೆ ಹಿನ್ನಡೆಯಾಗಿದೆ. ಇಬ್ಬರೂ ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ಹಾಗೂ ಇ.ಡಿ (ED) ಪ್ರಕರಣಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿ ಆದೇಶಿಸಿದೆ.
ಬಿಟ್ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಅಕ್ರಮ ಹಣ ವರ್ಗಾವಣೆ ತನಿಖೆ ಕೈಗೆತ್ತಿಕೊಂಡಿದ್ದರು. ತನಿಖೆಯ ಭಾಗವಾಗಿ ಕೆಲ ತಿಂಗಳ ಹಿಂದೆ ಹಲವು ಆರೋಪಿಗಳ ನಿವಾಸಗಳ ಮೇಲೆ ದಾಳಿ ನಡೆಸಿ, ಪ್ರಮುಖ ಆರೋಪಿಗಳಾದ ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಹಾಗೂ ಸುಖೇಶ್ ಹೆಗ್ಡೆ ಅವರನ್ನು ವಶಕ್ಕೆ ಪಡೆದು ಬಂಧಿಸಲಾಗಿತ್ತು. ಇದೇ ವೇಳೆ ಕಾಂಗ್ರೆಸ್ ಯುವ ನಾಯಕ ಮೊಹಮ್ಮದ್ ನಲಪಾಡ್ ಸೇರಿದಂತೆ ಹಲವರ ಮನೆಗಳ ಮೇಲೆಯೂ ಇ.ಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು.
ಪ್ರಕರಣದ ಸುದೀರ್ಘ ತನಿಖೆ ಪೂರ್ಣಗೊಳಿಸಿದ ಇ.ಡಿ ಅಧಿಕಾರಿಗಳು ಇತ್ತೀಚೆಗಷ್ಟೇ ಮೊಹಮ್ಮದ್ ನಲಪಾಡ್ ಸೇರಿದಂತೆ ಪ್ರಮುಖ ಆರೋಪಿಗಳ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ್ದರು. ಚಾರ್ಜ್ಶೀಟ್ ಸಲ್ಲಿಕೆಯಾದ ಬೆನ್ನಲ್ಲೇ ಬಂಧನದಲ್ಲಿದ್ದ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ನ್ಯಾಯಾಂಗ ಬಂಧನದಿಂದ ಹೊರಬರಲು ಪ್ರತ್ಯೇಕವಾಗಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ಈ ಜಾಮೀನು ಅರ್ಜಿಗಳ ವಿಚಾರಣೆ ವೇಳೆ ಇ.ಡಿ ಪರ ವಿಶೇಷ ಸರ್ಕಾರಿ ಅಭಿಯೋಜಕ ಮಧು ಆರ್. ರಾವ್ ತೀವ್ರ ಆಕ್ಷೇಪಣೆ ವ್ಯಕ್ತಪಡಿಸಿದ್ದರು. ಹಗರಣದ ಗಂಭೀರತೆ ಹಾಗೂ ಪ್ರಕರಣದಲ್ಲಿ ಆರೋಪಿಗಳು ವಹಿಸಿರುವ ಪಾತ್ರದ ಕುರಿತು ನ್ಯಾಯಪೀಠಕ್ಕೆ ಮಾಹಿತಿ ನೀಡಿದ ಅವರು, ಆರೋಪಿಗಳಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ಪ್ರಬಲ ವಾದ ಮಂಡಿಸಿದ್ದರು. ವಕೀಲರ ವಾದ-ಪ್ರತಿವಾದಗಳನ್ನು ಆಲಿಸಿದ ವಿಶೇಷ ನ್ಯಾಯಾಲಯವು ಇ.ಡಿ ವಾದವನ್ನು ಎತ್ತಿಹಿಡಿದು ಇಬ್ಬರೂ ಆರೋಪಿಗಳ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದೆ.