ಪೂರ್ವಭಾವಿ ಸಭೆಯಲ್ಲಿ ನಿರ್ಧಾರ ಜಿಲ್ಲಾಡಳಿತದಿಂದ ಮಹನೀಯರ ಜಯಂತಿ ಅರ್ಥಪೂರ್ಣ ಆಚರಣೆ: ಎಡಿಸಿ ಮಹಮ್ಮದ್ ಝುಬೇರ್
ಬಳ್ಳಾರಿ,ಫೆ.07
ಜಿಲ್ಲಾಡಳಿತದಿಂದ ಸಂತ ಸೇವಾಲಾಲ್, ಛತ್ರಪತಿ ಶಿವಾಜಿ ಮಹಾರಾಜ ಮತ್ತು ಸಂತಕವಿ ಸರ್ವಜ್ಞ ಜಯಂತಿ ಸೇರಿದಂತೆ ಮಹನೀಯರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಹೇಳಿದರು.
ಶುಕ್ರವಾರದಂದು, ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಮಹನೀಯರ ಜಯಂತಿ ಪೂರ್ವಭಾವಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು.
ಫೆ.15 ರಂದು ಸಂತ ಸೇವಾಲಾಲ್ ಜಯಂತಿ, ಫೆ.19 ರಂದು ಸಂಜೆ ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಮತ್ತು ಫೆ.20 ರಂದು ಸಂತಕವಿ ಸರ್ವಜ್ಞ ಜಯಂತಿಯನ್ನು ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದ ಸಭಾಂಗಣದಲ್ಲಿ ಅರ್ಥಪೂರ್ಣ ಆಚರಣೆಗೆ ಕ್ರಮ ವಹಿಸಲಾಗುವುದು ಎಂದರು.
ಶ್ರೀ ಸಂತ ಸೇವಾಲಾಲ್, ಛತ್ರಪತಿ ಶಿವಾಜಿ ಮಹಾರಾಜ ಮತ್ತು ಸಂತಕವಿ ಸರ್ವಜ್ಞರ ಜಯಂತಿ ಕಾರ್ಯಕ್ರಮಗಳ ಅಂಗವಾಗಿ ಭವ್ಯವಾದ ಮೆರವಣಿಗೆ ನಡೆಯಲಿದ್ದು, ರಸ್ತೆ ಸಂಚಾರ ಮಾರ್ಗಕ್ಕೆ ವ್ಯವಸ್ಥೆ ಅಚ್ಚುಕಟ್ಟಾಗಿ ಮಾಡಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಯಂತಿ ಆಚರಣೆ ಸಂದರ್ಭದಲ್ಲಿ ಶಿಷ್ಠಾಚಾರ ಪಾಲನೆ, ಆಹ್ವಾನ ಪತ್ರಿಕೆ, ವಿಶೇಷ ಉಪನ್ಯಾಸ, ವಚನ ಗಾಯನ ಸೇರಿದಂತೆ ಎಲ್ಲವೂ ಸರಿಯಾಗಿ ನಿರ್ವಹಿಸಬೇಕು. ಅದೇ ರೀತಿ ವೇದಿಕೆ, ಕುಡಿಯುವ ನೀರು, ಸ್ವಚ್ಛತೆ ಮತ್ತು ಮೆರವಣಿಗೆ ಸಂದರ್ಭದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯು ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.
ಮಹಾನ್ ವ್ಯಕ್ತಿಗಳ ವಿಚಾರಧಾರೆಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ನುರಿತ ಉಪನ್ಯಾಸಕರಿಂದ ವಿಶೇಷ ಉಪನ್ಯಾಸ ಆಯೋಜಿಸಲಾಗುವುದು ಎಂದರು.
ಜಯಂತಿ ಮೆರವಣಿಗೆಯಲ್ಲಿ ವಿವಿಧ ಸಾಂಸ್ಕೃತಿಕ ಕಲಾತಂಡಗಳನ್ನು ನಿಯೋಜಿಸಲಾಗುವುದು. ಸಮುದಾಯದಲ್ಲಿ ಅತಿಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಮತ್ತು ಪಿಹೆಚ್ಡಿ ಪದವಿ ಪಡೆದ ಅಭ್ಯರ್ಥಿಗಳಿದ್ದರೆ ಸನ್ಮಾನಿಸಲಾಗುವುದು ಎಂದರು.
ಜಯಂತಿ ಕಾರ್ಯಕ್ರಮಗಳಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸೂಚಿಸಿದರು.
ಸಭೆಯಲ್ಲಿ ವಿವಿಧ ಸಮುದಾಯದ ಮುಖಂಡರು, ಜನ ಪ್ರತಿನಿಧಿಗಳು ಜಯಂತಿಗಳ ಆಚರಣೆಯ ಕುರಿತು ತಮ್ಮ ಸಲಹೆ-ಸೂಚನೆ ನೀಡಿದರು. ಇದೇ ಸಂದರ್ಭದಲ್ಲಿ ಮಹನೀಯರ ಹೆಸರುಗಳನ್ನು ರಸ್ತೆ ಮತ್ತು ವೃತ್ತಗಳಿಗೆ ನಾಮಕರಣ ಮಾಡುವ ಕುರಿತು ಸಭೆಯಲ್ಲಿ ಪ್ರಸ್ತಾಪಿಸಿದರು.
ಈ ವೇಳೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಮುದಾಯದ ಮುಖಂಡರು, ಜನ ಪ್ರತಿನಿಧಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
----------
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.