ಬೆಂಗಳೂರು : “ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ” ಎಂಬ ಧ್ಯೇಯದೊಂದಿಗೆ ಮಂಡನೆಯಾದ 2026–27ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ನಗರಾಭಿವೃದ್ಧಿ ಯೋಜನೆಗಳಿಗೆ ಸರ್ಕಾರ ವಿಶೇಷ ನೆರವು ಘೋಷಿಸಿದೆ.
ರಾಜ್ಯದ ಪ್ರಮುಖ ನಗರಗಳಲ್ಲಿ ರಸ್ತೆಗಳ ದೀರ್ಘಕಾಲಿಕ ಬಾಳಿಕೆಗಾಗಿ ಮುಂದಿನ ಮೂರು ವರ್ಷಗಳಲ್ಲಿ 450 ಕಿಲೋಮೀಟರ್ಗೂ ಹೆಚ್ಚು ಉದ್ದದ ರಸ್ತೆಗಳನ್ನು ಸುಮಾರು 3,000 ಕೋಟಿ ರೂಪಾಯಿ ವೆಚ್ಚದಲ್ಲಿ ವೈಟ್ ಟಾಪಿಂಗ್ ಮಾಡುವ ಯೋಜನೆ ಕೈಗೊಳ್ಳಲಾಗಿದೆ.
ಬೆಂಗಳೂರು ನಗರದಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶದಿಂದ ಪ್ರಸಕ್ತ ಸಾಲಿನಲ್ಲಿ 41 ಕಿಲೋಮೀಟರ್ ಹೆಚ್ಚುವರಿ ಮೆಟ್ರೋ ಮಾರ್ಗಗಳನ್ನು ಪೂರ್ಣಗೊಳಿಸಲು ಯೋಜಿಸಲಾಗಿದೆ. ಇದರಿಂದ ಪ್ರತಿದಿನ ಸುಮಾರು 15 ಲಕ್ಷ ಪ್ರಯಾಣಿಕರಿಗೆ ಅನುಕೂಲವಾಗಲಿದೆ.
ಇನ್ನು ನಗರದ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಹೆಬ್ಬಾಳ ಜಂಕ್ಷನ್ನಿಂದ ಮೇಖ್ರಿ ಸರ್ಕಲ್ವರೆಗೆ ಸುರಂಗ ಮಾರ್ಗ ಹಾಗೂ ಮೇಲು ಸೇತುವೆ ರಸ್ತೆಗಳ ನಿರ್ಮಾಣವನ್ನು 2,250 ಕೋಟಿ ರೂಪಾಯಿ ವೆಚ್ಚದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಕೈಗೊಳ್ಳಲಾಗುತ್ತದೆ.
ಉನ್ನತ ವ್ಯಾಸಾಂಗ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ನಗರಗಳಿಗೆ ಬರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಧಾರವಾಡದಲ್ಲಿ 4 ಹಾಗೂ ಬೆಂಗಳೂರಿನಲ್ಲಿ 2 ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ಗಳನ್ನು ಆರಂಭಿಸುವುದಾಗಿ ಸರ್ಕಾರ ಘೋಷಿಸಿದೆ.
ಈ ಯೋಜನೆಗಳು ನಗರಗಳ ಮೂಲಸೌಕರ್ಯ ಅಭಿವೃದ್ಧಿಗೆ ಹಾಗೂ ಸಾರ್ವಜನಿಕರ ಸಂಚಾರ ಸೌಲಭ್ಯಕ್ಕೆ ಮಹತ್ವದ ಉತ್ತೇಜನ ನೀಡಲಿವೆ.