ಬೆಂಗಳೂರು: ರಾಜ್ಯದಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಗೆ 2026–27ನೇ ಸಾಲಿನ ಬಜೆಟ್ನಲ್ಲಿ ಹಲವು ಮಹತ್ವದ ಯೋಜನೆಗಳನ್ನು ಸರ್ಕಾರ ಘೋಷಿಸಿದೆ. ಪ್ರವಾಸೋದ್ಯಮ ಸಾಮರ್ಥ್ಯವನ್ನು ಹೆಚ್ಚಿಸಿ ಹೊಸ ಅವಕಾಶಗಳನ್ನು ಸೃಷ್ಟಿಸುವ ಉದ್ದೇಶದಿಂದ ವಿವಿಧ ಕಾರ್ಯಕ್ರಮಗಳನ್ನು ಜಾರಿಗೆ ತರಲು ತೀರ್ಮಾನಿಸಲಾಗಿದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳ ವಿಶೇಷ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸಮರ್ಪಕವಾಗಿ ಬಳಸಿಕೊಳ್ಳಲು ‘ಸಮಗ್ರ ಕರಾವಳಿ ಅಭಿವೃದ್ಧಿ ಯೋಜನೆ’ ಜಾರಿಗೆ ತರಲಾಗುತ್ತದೆ. ಈ ಯೋಜನೆಯ ಮೂಲಕ ಕರಾವಳಿ ಪ್ರದೇಶಗಳಲ್ಲಿ ಪ್ರವಾಸೋದ್ಯಮ ಮೂಲಸೌಕರ್ಯಗಳನ್ನು ಬಲಪಡಿಸಲು ಕ್ರಮ ಕೈಗೊಳ್ಳಲಾಗುತ್ತದೆ.
ಪ್ರವಾಸೋದ್ಯಮ ಕ್ಷೇತ್ರಕ್ಕೆ ಅಗತ್ಯವಿರುವ ಪರಿಣತ ಮಾರ್ಗದರ್ಶಕರನ್ನು ರೂಪಿಸುವ ಉದ್ದೇಶದಿಂದ ಆಯ್ದ ವಿಶ್ವವಿದ್ಯಾಲಯಗಳಲ್ಲಿ ಪ್ರವಾಸ ಮಾರ್ಗದರ್ಶಕರಿಗೆ ಡಿಪ್ಲೋಮಾ ಕೋರ್ಸ್ ಆರಂಭಿಸಲಾಗುತ್ತದೆ. ಇದರಿಂದ ಯುವಕರಿಗೆ ಉದ್ಯೋಗಾವಕಾಶಗಳು ಹೆಚ್ಚುವ ನಿರೀಕ್ಷೆಯಿದೆ.
ಚಿಕ್ಕಮಗಳೂರು ಜಿಲ್ಲೆಯ ಪ್ರವಾಸೋದ್ಯಮವನ್ನು ಉತ್ತೇಜಿಸಲು ಮುಳ್ಳಯ್ಯನಗಿರಿ – ಸೀತಾಳಯ್ಯನಗಿರಿಯಿಂದ ಕೈಮರದವರೆಗೆ ರೋಪ್-ವೇ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ. ಈ ಯೋಜನೆ ಜಾರಿಯಾದರೆ ಪ್ರವಾಸಿಗರಿಗೆ ಹೊಸ ಅನುಭವ ಸಿಗಲಿದೆ.
ಇದರ ಜೊತೆಗೆ ರಾಜ್ಯದಲ್ಲಿರುವ 844 ಸಂರಕ್ಷಿತ ಸ್ಮಾರಕಗಳು ಹಾಗೂ 1,000 ಅಸುರಕ್ಷಿತ ಸ್ಮಾರಕಗಳ ಸಂರಕ್ಷಣೆಗಾಗಿ “ಸ್ಮಾರಕ ಮಿತ್ರ” ಯೋಜನೆ ಜಾರಿಗೆ ತರಲಾಗುತ್ತದೆ. ಈ ಯೋಜನೆಯಡಿ 1,000 ಸ್ಮಾರಕ ಮಿತ್ರರನ್ನು ಗುರುತಿಸಿ ತರಬೇತಿ ನೀಡಲಾಗುತ್ತದೆ ಹಾಗೂ ಅವರನ್ನು ಇಲಾಖೆಯ ಮಾನ್ಯತಾ ಪಟ್ಟಿಯಲ್ಲಿ ಸೇರಿಸಲಾಗುತ್ತದೆ.
ಈ ಕ್ರಮಗಳಿಂದ ರಾಜ್ಯದ ಪ್ರವಾಸೋದ್ಯಮ ಕ್ಷೇತ್ರ ಮತ್ತಷ್ಟು ಬಲ ಪಡೆದು ಆರ್ಥಿಕ ಚಟುವಟಿಕೆಗಳು ಮತ್ತು ಉದ್ಯೋಗಾವಕಾಶಗಳು ಹೆಚ್ಚುವ ನಿರೀಕ್ಷೆ ವ್ಯಕ್ತವಾಗಿದೆ.