ಬೆಂಗಳೂರು/ಧಾರವಾಡ, ಮೇ 3: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನವನ್ನು ಅನರ್ಹಗೊಳಿಸಿ ರಾಜ್ಯ ವಿಧಾನಸಭೆ ಕಾರ್ಯದರ್ಶಿ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.
ಈ ಮೂಲಕ ಧಾರವಾಡ ವಿಧಾನಸಭಾ ಕ್ಷೇತ್ರ ತೆರವಾಗಿದೆ ಎಂದು ತಿಳಿಸಲಾಗಿದ್ದು, ಏಪ್ರಿಲ್ 15ರಿಂದಲೇ ಅವರ ಸದಸ್ಯತ್ವ ರದ್ದಾಗಿದೆ ಎಂದು ಪ್ರಕಟನೆಯಲ್ಲಿ ಸ್ಪಷ್ಟಪಡಿಸಲಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏಪ್ರಿಲ್ 13ರಂದು ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಯನ್ನು ದೋಷಿ ಎಂದು ತೀರ್ಪು ನೀಡಿದ್ದು, ಏಪ್ರಿಲ್ 15ರಂದು ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ಹಿನ್ನೆಲೆ ಮೇ 2ರಂದು ಶಾಸಕ ಸ್ಥಾನ ರದ್ದುಗೊಂಡಿರುವ ಬಗ್ಗೆ ಅಧಿಕೃತ ಪ್ರಕಟಣೆ ಹೊರಬಂದಿದೆ.
ನಿಯಮ ಏನು ಹೇಳುತ್ತದೆ?
ಸಂವಿಧಾನದ ವಿಧಿ 191(1)(ಇ) ಹಾಗೂ ಜನಪ್ರತಿನಿಧಿಗಳ ಕಾಯ್ದೆ, 1951ರ ಸೆಕ್ಷನ್ 8 ಪ್ರಕಾರ, ಕ್ರಿಮಿನಲ್ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿ ಕನಿಷ್ಠ 2 ವರ್ಷ ಅಥವಾ ಹೆಚ್ಚಿನ ಅವಧಿಯ ಶಿಕ್ಷೆ ವಿಧಿಸಲ್ಪಟ್ಟ ತಕ್ಷಣವೇ ಜನಪ್ರತಿನಿಧಿಗಳು ಅನರ್ಹರಾಗುತ್ತಾರೆ. ಕೊಲೆ ಪ್ರಕರಣಗಳಲ್ಲಿ (ಐಪಿಸಿ ಸೆಕ್ಷನ್ 302) ಶಿಕ್ಷೆ ಜೀವಾವಧಿ ಅಥವಾ ಮರಣದಂಡನೆ ಆಗಿರುವುದರಿಂದ, ತೀರ್ಪು ಹೊರಬಂದ ತಕ್ಷಣವೇ ಶಾಸಕ ಸ್ಥಾನ ರದ್ದಾಗುತ್ತದೆ.
ಅನರ್ಹತೆಯ ಅವಧಿ
ಶಿಕ್ಷೆ ಅನುಭವಿಸಿ ಬಿಡುಗಡೆಗೊಂಡ ನಂತರವೂ ಮುಂದಿನ 6 ವರ್ಷಗಳ ಕಾಲ ಯಾವುದೇ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಇರುವುದಿಲ್ಲ.
ಸೂಪ್ರೀಂ ಕೋರ್ಟ್ ತೀರ್ಪು
2013ರ ಲಿಲಿ ಥಾಮಸ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಂತೆ, ಶಿಕ್ಷೆ ವಿಧಿಸಿದ ತಕ್ಷಣವೇ ಅನರ್ಹತೆ ಜಾರಿಗೆ ಬರುತ್ತದೆ. ಮೇಲ್ಮನವಿ ಸಲ್ಲಿಸಲು ಹಿಂದಿನಂತೆ 3 ತಿಂಗಳ ಕಾಲಾವಕಾಶ ಇರುವುದಿಲ್ಲ.
ಮೇಲ್ಮನವಿ ಅರ್ಜಿ
ಇದೇ ವೇಳೆ, ಜೀವಾವಧಿ ಶಿಕ್ಷೆಗೆ ತಡೆಯಾಜ್ಞೆ ಕೋರಿ ವಿನಯ್ ಕುಲಕರ್ಣಿ ಹಾಗೂ ಇನ್ನೊಬ್ಬ ಆರೋಪಿ ಚಂದ್ರಶೇಖರ್ ಇಂಡಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದು, ಶಿಕ್ಷೆಯನ್ನು ಅಮಾನತಿನಲ್ಲಿ ಇರಿಸುವಂತೆ ಮನವಿ ಮಾಡಿದ್ದಾರೆ.
ಪ್ರಕರಣದ ಹಿನ್ನಲೆ
2016ರಲ್ಲಿ ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್ ಗೌಡ ಅವರನ್ನು ಹತ್ಯೆಗೈದ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸೇರಿದಂತೆ 21 ಮಂದಿ ವಿರುದ್ಧ ಆರೋಪ ಕೇಳಿಬಂದಿತ್ತು. ಬಳಿಕ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲಾಗಿದ್ದು, ದೀರ್ಘ ತನಿಖೆ ಮತ್ತು ವಿಚಾರಣೆ ನಂತರ ಕೊಲೆ, ಸಂಚು, ಸಾಕ್ಷ್ಯ ನಾಶ ಸೇರಿದಂತೆ ಹಲವು ಆರೋಪಗಳಲ್ಲಿ 16 ಮಂದಿಯನ್ನು ದೋಷಿಗಳೆಂದು ನ್ಯಾಯಾಲಯ ತೀರ್ಪು ನೀಡಿದೆ. ಇಬ್ಬರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ತೀರ್ಪಿನ ನಂತರ ದೋಷಿಗಳನ್ನು ಸಿಬಿಐ ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆ ನಡೆಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ.