LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಆನ್‍ಲೈನ್ ವಂಚನೆ ತಡೆಗೆ ಕಾನೂನು ಅರಿವು ಅಗತ್ಯ ನ್ಯಾಯಾಧೀಶ ಎಂ.ವಿಜಯ್ ಹೇಳಿಕೆ

ಚಿತ್ರದುರ್ಗ:  ಹತ್ತು ವರ್ಷಗಳ ಹಿಂದೆ ಜನರು ನೇರವಾಗಿ ಅಂಗಡಿಗಳಿಗೆ ಭೇಟಿ ನೀಡಿ, ವಸ್ತುವಿನ ಗುಣಮಟ್ಟ ಪರಿಶೀಲಿಸಿ ಖರೀದಿ ಮಾಡುತ್ತಿದ್ದರು. ಆದರೆ ಇಂದು ಆನ್‍ಲೈನ್ ಶಾಪಿಂಗ್ ವ್ಯಾಪಕವಾಗಿದ್ದು, ಅದರೊಂದಿಗೆ ಗ್ರಾಹಕರು ವಂಚನೆಗೊಳಗಾಗುವ ಸಾಧ್ಯತೆಗಳೂ ಹೆಚ್ಚಿವೆ. ಹೀಗಾಗಿ ಪ್ರತಿಯೊಬ್ಬ ಗ್ರಾಹಕನೂ ಜಾಗೃತನಾಗಿರುವುದು ಇಂದಿನ ಅಗತ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ವಿಜಯ್ ತಿಳಿಸಿದರು.

ನಗರದ ಸರ್ಕಾರಿ ಕಲಾ ಕಾಲೇಜಿನಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ  ಪರಿಹಾರ ಆಯೋಗ, ಕಾನೂನು ಮಾಪನಾಶಾಸ್ತ್ರ ಇಲಾಖೆ, ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಅಡುಗೆ ಅನಿಲ ವಿತರಕರು, ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ಇವರುಗಳ ಸಂಯುಕ್ತಾಶ್ರಯದಲ್ಲಿ “ಸುರಕ್ಷಿತ ಉತ್ಪನ್ನಗಳು, ಆತ್ಮವಿಶ್ವಾಸದ ಗ್ರಾಹಕರು” ಎಂಬ ಘೋಷವಾಕ್ಯದೊಂದಿಗೆ ಹಮ್ಮಿಕೊಂಡಿದ್ದ “ವಿಶ್ವ ಗ್ರಾಹಕರ ದಿನಾಚರಣೆ” ಉದ್ಘಾಟಿಸಿ ಅವರು ಮಾತನಾಡಿದರು.

ಆನ್‍ಲೈನ್ ವೇದಿಕೆಗಳಲ್ಲಿ ವಂಚನೆಗೊಳಗಾದ ಸಂದರ್ಭದಲ್ಲಿ ಗ್ರಾಹಕರು ಎದೆಗುಂದದೆ ಗ್ರಾಹಕರ ವೇದಿಕೆಗೆ ದೂರು ಸಲ್ಲಿಸಬೇಕು. ಪ್ರಸ್ತುತ ಜಿಲ್ಲಾ ಮಟ್ಟದಲ್ಲಿ ಮಾತ್ರವಲ್ಲದೆ, ಆನ್‍ಲೈನ್ ಮೂಲಕವೂ ದೂರನ್ನು ದಾಖಲಿಸುವ ಸೌಲಭ್ಯಗಳು ಲಭ್ಯವಿವೆ. ಯಾವುದೇ ಉತ್ಪನ್ನ ಕೊಳ್ಳುವ ಮೊದಲು ಅದರ ಗುಣಮಟ್ಟ, ಸೇವೆ ಹಾಗೂ ಬಾಳಿಕೆಯ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಮಾರುಕಟ್ಟೆಯಲ್ಲಿ ಲಭ್ಯವಿರುವ ನಕಲಿ ಬ್ರ್ಯಾಂಡ್‍ಗಳ ಬಗ್ಗೆ ಎಚ್ಚರದಿಂದಿರಬೇಕು. ಗ್ರಾಹಕರು ಕಾನೂನಿನ ಅರಿವು ಹೊಂದಿದ್ದರೆ ಮಾತ್ರ ತಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ಸಾಧ್ಯ. ವಿದ್ಯಾರ್ಥಿಗಳು ಇಂತಹ ಮಾಹಿತಿಗಳನ್ನು ಪಡೆದು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಹೆಚ್.ಎಸ್.ಮಹೇಶ್ವರಪ್ಪ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಮಾರುಕಟ್ಟೆಯಲ್ಲಿ ಗ್ರಾಹಕರು ಕೇವಲ ವಸ್ತುಗಳನ್ನು ಖರೀದಿಸುವವರಾಗದೆ, ತಮ್ಮ ಹಕ್ಕುಗಳ ಬಗ್ಗೆ ಸಂಪೂರ್ಣ ಅರಿವುಳ್ಳವರಾಗಿರಬೇಕು ಎಂದು ತಿಳಿಸಿದರು.

ಒಂದು ಕಂಪನಿಯ ಉತ್ಪನ್ನ ಮಾರುಕಟ್ಟೆಗೆ ಬಂದರೆ ಅದಕ್ಕೆ ಪೈಪೋಟಿ ನೀಡಲು ಹತ್ತಾರು ಕಂಪನಿಗಳು ಕಳಪೆ ಗುಣಮಟ್ಟದ ವಸ್ತುಗಳನ್ನು ಬಿಡುಗಡೆ ಮಾಡುತ್ತವೆ. ಇಂತಹ ಸಂದರ್ಭದಲ್ಲಿ ಗ್ರಾಹಕರು ಗುಣಮಟ್ಟ ಮತ್ತು ಪರಿಮಾಣದ ಬಗ್ಗೆ ಎಚ್ಚರವಹಿಸುವುದು ಅತ್ಯಗತ್ಯ. ಚಿನ್ನ, ಬೆಳ್ಳಿ, ಬಟ್ಟೆ, ವಾಹನ ಹೀಗೆ ಯಾವುದೇ ಖರೀದಿ ಮಾಡಿದರೂ ಮಾರಾಟಗಾರನ ಹೆಸರಿರುವ ಅಸಲಿ ಬಿಲ್ ಪಡೆಯುವುದು ಗ್ರಾಹಕರ ಹಕ್ಕು ಮತ್ತು ಕರ್ತವ್ಯವಾಗಿದೆ. ಒಂದು ವೇಳೆ ವಂಚನೆಗೆ ಒಳಗಾದಲ್ಲಿ ಅಥವಾ ವಸ್ತುವು ಗ್ಯಾರಂಟಿ ಅವಧಿಯೊಳಗೆ ಕೆಟ್ಟುಹೋದಲ್ಲಿ ಕಾನೂನು ಹೋರಾಟ ಮಾಡಲು ಈ ಬಿಲ್ ಪ್ರಮುಖ ದಾಖಲೆಯಾಗುತ್ತದೆ ಎಂದು ಹೇಳಿದರು.

ಗ್ರಾಹಕರಿಗೆ ವಂಚನೆಯಾದಲ್ಲಿ ನ್ಯಾಯ ಪಡೆಯಲು ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಕಚೇರಿಯಲ್ಲಿ ಕೇಸ್ ದಾಖಲಿಸಬಹುದು. ಕೇವಲ ನಷ್ಟವಾದ ಹಣ ಮಾತ್ರವಲ್ಲದೆ, ಅದಕ್ಕೆ ತಗಲುವ ಬಡ್ಡಿ ಮತ್ತು ಪರಿಹಾರವನ್ನು ಪಡೆಯಲು ಗ್ರಾಹಕರು ಅರ್ಹರಾಗಿರುತ್ತಾರೆ. ಯುವಜನತೆಯೇ ದೇಶದ ಭವಿಷ್ಯವಾಗಿದ್ದು, ವಿದ್ಯಾರ್ಥಿಗಳು ಗ್ರಾಹಕ ಹಕ್ಕುಗಳ ಬಗ್ಗೆ ಜಾಗೃತಿ ಬೆಳೆಸಿಕೊಂಡು ಜವಾಬ್ದಾರಿಯುತ ನಾಗರಿಕರಾಗಬೇಕು ಎಂದು ಆಶಯ ವ್ಯಕ್ತಪಡಿಸಿದರು.

ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷೆ ಬಿ.ಹೆಚ್.ಯಶೋಧ ಮಾತನಾಡಿ, ಮಗು ತಾಯಿಯ ಗರ್ಭದಲ್ಲಿ ಇದ್ದಾಗಿನಿಂದಲೇ ಯಾವುದಾದರೂ ಒಂದು ರೂಪದಲ್ಲಿ ಗ್ರಾಹಕನಾಗಿರುತ್ತದೆ. ಹೀಗಾಗಿ ಪ್ರತಿಯೊಬ್ಬರೂ ತಮ್ಮ ಹಕ್ಕುಗಳ ಬಗ್ಗೆ ಜಾಗೃತಿ ಬೆಳೆಸಿಕೊಳ್ಳಬೇಕು. ಯಾವುದೇ ವಸ್ತು ಅಥವಾ ಸೇವೆಯನ್ನು ಹಣ ನೀಡಿ ಪಡೆದಾಗ ಅದಕ್ಕೆ ಸಂಬಂಧಿಸಿದ ಅಧಿಕೃತ ರಶೀದಿಯನ್ನು ಪಡೆಯುವುದು ಅತ್ಯಗತ್ಯ. ರಶೀದಿ ಇಲ್ಲದಿದ್ದರೆ ಗ್ರಾಹಕರು ನ್ಯಾಯಾಲಯದಲ್ಲಿ ಪರಿಹಾರ ಪಡೆಯಲು ಅರ್ಹರಾಗುವುದಿಲ್ಲ ಎಂದು ತಿಳಿಸಿದರು.

ಸರ್ಕಾರಿ ಕಲಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಜೆ. ಕರಿಯಪ್ಪ ಮಾಳಿಗೆ ಮಾತನಾಡಿ, ನಾವೆಲ್ಲರೂ ಹುಟ್ಟು ಮತ್ತು ಸಾವಿನ ಮಧ್ಯೆ ನಿರಂತರವಾಗಿ ಗ್ರಾಹಕರಾಗಿರುತ್ತೇವೆ. ಆದ್ದರಿಂದ ಗ್ರಾಹಕ ಹಕ್ಕುಗಳ ಬಗ್ಗೆ ತಿಳಿವಳಿಕೆ ಹೊಂದುವುದು ಬದುಕಿನ ಶಿಕ್ಷಣದ ಒಂದು ಭಾಗವಾಗಿದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳು ಕೇವಲ ಪದವಿಗಾಗಿ ಓದಬಾರದು, ಬದಲಿಗೆ ಸಮಾಜದಲ್ಲಿ ಬದುಕಲು ಅಗತ್ಯವಿರುವ ಸಾಮಾನ್ಯ ಜ್ಞಾನ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದ ಅವರು, ಪುಸ್ತಕದ ಶಿಕ್ಷಣದ ಜೊತೆಗೆ ಬದುಕಿನ ಶಿಕ್ಷಣವೂ ಅತ್ಯಂತ ಮುಖ್ಯವಾಗಿದೆ.

ಇಂದಿನ ವಿಜ್ಞಾನ ಮತ್ತು ತಂತ್ರಜ್ಞಾನದ ಯುಗದಲ್ಲೂ ನಮಗೆ ಅರಿವಿಲ್ಲದೆ ಅನೇಕ ತಪ್ಪುಗಳನ್ನು ಮಾಡುತ್ತಿದ್ದೇವೆ. ಯಾವುದೇ ವಸ್ತುವನ್ನು ಕೊಂಡುಕೊಳ್ಳುವ ಮುನ್ನ ಅದರ ಗುಣಮಟ್ಟ ಮತ್ತು ಸ್ವರೂಪದ ಬಗ್ಗೆ ಪೂರ್ಣ ಮಾಹಿತಿ ಇರಬೇಕು ಎಂದು ತಿಳಿಸಿದರು.

ಗ್ರಾಹಕರ ಹಿತರಕ್ಷಣೆಗಾಗಿ ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಆಯೋಗಗಳನ್ನು ರಚಿಸಲಾಗಿದ್ದು, ಜಿಲ್ಲಾ ಆಯೋಗದಲ್ಲಿ 50 ಲಕ್ಷ ರೂಪಾಯಿವರೆಗೂ ಪರಿಹಾರ ಪಡೆಯಲು ಅವಕಾಶವಿದೆ. ವಸ್ತು ಅಥವಾ ಸೇವೆಯಲ್ಲಿ ದೋಷ ಕಂಡುಬಂದ ಎರಡು ವರ್ಷದೊಳಗಾಗಿ ದೂರು ಸಲ್ಲಿಸಬೇಕು ಎಂದು ಅವರು ಮಾಹಿತಿ ನೀಡಿದರು.

ದಾರಿ ತಪ್ಪಿಸುವ ಜಾಹೀರಾತುಗಳು, ಎಂಆರ್‍ಪಿ ದರಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡುವುದು. ದೋಷಪೂರಿತ ವಸ್ತುಗಳ ಮಾರಾಟದ ವಿರುದ್ಧ ಧ್ವನಿ ಎತ್ತಬೇಕು. ವಿಮೆ, ಬ್ಯಾಂಕಿಂಗ್, ಟೆಲಿಫೋನ್, ಸಾರಿಗೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಆಗುವ ಅನ್ಯಾಯದ ವಿರುದ್ಧ ಗ್ರಾಹಕರು ಆಯೋಗದ ಮೊರೆ ಹೋಗಬಹುದು ಎಂದು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಉಪ ಪ್ರಧಾನ ಕಾನೂನು ಅಭಿರಕ್ಷಕ ಎಂ.ಮೂರ್ತಿ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಶಿದ್ರಾಮ ಮಾರಿಹಾಳ, ಕಾನೂನು ಮಾಪನಾ ಶಾಸ್ತ್ರ ಸಹಾಯಕ ನಿಯಂತ್ರಕ ಚನ್ನಬಸಪ್ಪ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯೆ ಯು.ಬಿ.ಗೀತಾ ಇದ್ದರು. ರಂಗನಿರ್ದೇಶಕ ಕೆಪಿಎಂ ಗಣೇಶಯ್ಯ ನಿರೂಪಿಸಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026