ಗುಂಪು ಚದುರಿಸಲು ಪೆಲ್ಲಿಟ್ ಗನ್ಗಳ ಬಳಕೆಯನ್ನು ನಿಷೇಧಿಸುವಂತೆ ಕೋರಿ ಸಲ್ಲಿಕೆಯಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಗುರುವಾರ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಪೆಲ್ಲಿಟ್ ಗನ್ ಬಳಕೆಯನ್ನು ನಿಯಂತ್ರಿಸುವ ಪ್ರಮಾಣಿತ ಕಾರ್ಯಾಚರಣೆ ವಿಧಾನ (SOP) ಹಾಗೂ ಯಾವ ಸಂದರ್ಭಗಳಲ್ಲಿ ಇದನ್ನು ಬಳಸಬಹುದು ಎಂಬುದನ್ನು ವಿವರಿಸುವಂತೆ ನ್ಯಾಯಾಲಯ ಕೇಂದ್ರವನ್ನು ಕೇಳಿದೆ.
ಮಾಜಿ ಕೇಂದ್ರ ಮಾಹಿತಿ ಆಯುಕ್ತ ಮತ್ತು ನಿವೃತ್ತ ಐಪಿಎಸ್ ಅಧಿಕಾರಿ ಯಶೋವರ್ಧನ್ ಆಜಾದ್ ಹಾಗೂ ಇಬ್ಬರು ಸಂತ್ರಸ್ತರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿ. ಮೊಹನಾ ಅವರನ್ನೊಳಗೊಂಡ ಪೀಠ ಈ ನಿರ್ದೇಶನ ನೀಡಿದೆ. ದೆಹಲಿಯ ಜಂತರ್ ಮಂತರ್ನಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ನೇತೃತ್ವದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ನಿಯೋಜಿಸಲಾದ ತ್ವರಿತ ಕ್ರಿಯಾ ಪಡೆ (RAF)ಯ ಮದ್ದುಗುಂಡುಗಳ ಲಾಗ್ ಅನ್ನು ಸಂರಕ್ಷಿಸುವಂತೆಯೂ ನ್ಯಾಯಾಲಯ ಸೂಚಿಸಿದೆ. ಪೆಲ್ಲಿಟ್ ಗನ್ ಗಾಯಾಳುಗಳಿಗೆ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ಖಚಿತಪಡಿಸುವಂತೆ ದೆಹಲಿ ಸರ್ಕಾರಕ್ಕೂ ನಿರ್ದೇಶಿಸಲಾಗಿದೆ.