ನವದೆಹಲಿ: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಎಣಿಕೆ ಮರು ಎಣಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಟಿ.ಡಿ. ರಾಜೇಗೌಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಮರು ಎಣಿಕೆಯಲ್ಲಿ ಪರಾಭವಗೊಂಡ ಕಾಂಗ್ರೆಸ್ ನ ಟಿ.ಡಿ. ರಾಜೇಗೌಡ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಗೆ ಸೂಚಿಸಿದ್ದ ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಶುಕ್ರವಾರ ಒಪ್ಪಿದೆ.
ಚಲಾವಣೆಯಾದ 1811 ಅಂಚು ಮತಗಳ ಪೈಕಿ ತಿರಸ್ಕೃತವಾದ 279 ಅಂಚೆ ಮತಗಳನ್ನು ಮರುಪರಿಶೀಲಿಸಿ ನಂತರ ಎಲ್ಲಾ ಮತಗಳನ್ನು ಮರು ಎಣಿಕೆ ಮಾಡಿ ಫಲಿತಾಂಶ ಪ್ರಕಟಿಸಬೇಕು ಎಂದು ನಿರ್ದೇಶಿಸಿದ ಹೈಕೋರ್ಟ್ ನ ಏಪ್ರಿಲ್ 6ರ ಆದೇಶವನ್ನು ಮೇಲ್ಮನವಿಯಲ್ಲಿ ರಾಜೇಗೌಡ ಪ್ರಶ್ನಿಸಿದ್ದಾರೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದ ಎದುರು ವಕೀಲ ದೇವದತ್ ಕಾಮತ್ ವಿಷಯ ಪ್ರಸ್ತಾಪಿಸಿ ಮೇಲ್ಮನವಿಯನ್ನು ಮೇ 11ರಂದು ತುರ್ತಾಗಿ ಪಟ್ಟಿ ಮಾಡುವಂತೆ ಮನವಿ ಮಾಡಿದ್ದಾರೆ.
ಮರು ಎಣಿಕೆಗೆ ಆದೇಶಿಸುವ ಮೂಲಕ ಹೈಕೋರ್ಟ್ ಲೋಪ ಎಸಗಿದ್ದು ಇದರ ಪರಿಣಾಮ ಬಿಜೆಪಿ ಮುಖಂಡ ಡಿ.ಎನ್. ಜೀವರಾಜ್ ಶೃಂಗೇರಿ ಚುನಾಯಿತ ಶಾಸಕ ಎಂದು ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ. ತ್ವರಿತ ವಿಚಾರಣೆ ಕೋರಿಕೆಯನ್ನು ಪರಿಗಣಿಸುವುದಾಗಿ ನ್ಯಾಯಪೀಠ ತಿಳಿಸಿದೆ.
ಅಂಚೆ ಮತ ಎಣಿಕೆಯಲ್ಲಿ ಅನ್ಯಾಯವಾಗಿದೆ ಎಂದು ಬಿಜೆಪಿಯ ಜೀವರಾಜ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಎರಡೂವರೆ ವರ್ಷಗಳ ವಿಚಾರಣೆಯ ನಂತರ ಹೈಕೋರ್ಟ್ ಅಂಚೆ ಮತಗಳ ಮರು ಎಣಿಕೆಗೆ ಆದೇಶಿಸಿದ್ದು, ಜಿಲ್ಲಾ ಚುನಾವಣಾ ಅಧಿಕಾರಿಗಳ ನೇತೃತ್ವದಲ್ಲಿ ಅಂಚೆ ಮತಗಳ ಮರು ಎಣಿಕೆ ನಡೆಸಿದ್ದುಮ ಇದರಲ್ಲಿ ಜೀವರಾಜ್ ಗೆಲುವು ಸಾಧಿಸಿದ್ದರು. ಪ್ರಮಾಣವಚನವನ್ನೂ ಸ್ವೀಕರಿಸಿದ್ದರು. ಇದರ ಬೆನ್ನಲ್ಲೇ ರಾಜೇಗೌಡ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ತುರ್ತು ವಿಚಾರಣೆಗೆ ಸಿಜೆಐ ಸೂರ್ಯಕಾಂತ್ ನೇತೃತ್ವದ ಪೀಠದ ಮುಂದೆ ಮನವಿ ಮಾಡಲಾಗಿದೆ.