Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಮುಂಜಾಗ್ರತಾ ಕ್ರಮ ಕೈಗೊಳ್ಳದ ಕಾರಣದಿಂದ ಅನಾಹುತ: ಗರಂ ಆದ ಸಿದ್ದರಾಮಯ್ಯ

 

ಬೆಂಗಳೂರು :
ಹಿಂದಿನ ಪ್ರವಾಹದ ಅನುಭವದಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೆ ಜೀವಹಾನಿ ತಪ್ಪಿಸಬಹುದು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಅವರು ಇಂದು ರಾಜ್ಯದ ಹವಾಮಾನ, ಮಳೆ ಹಾಗೂ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಪರಿಶೀಲಿಸಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವೀಡಿಯೊ ಸಂವಾದ ನಡೆಸಿದರು.

ಪ್ರವಾಹ ಬಂದಾಗ ಬಹಳ ರೈತರನ್ನು ಸ್ಥಳಾಂತರ ಮಾಡಲು ಸಾಧ್ಯವಿಲ್ಲ. ಅದಕ್ಕೆ ಪ್ರವಾಹದ ಮುನ್ಸೂಚನೆ ಬಂದ ಕೂಡಲೇ ಸ್ಥಳಾಂತರಕ್ಕೆ ಕ್ರಮ ವಹಿಸಿ. ಹಿಂದಿನ ಸರ್ಕಾರದ ವತಿಯಿಂದ ಪರ್ಯಾಯವಾಗಿ ಕಟ್ಟಲಾಗಿರುವ ಮನೆಗಳು ಯಾರೂ ವಾಸ ಮಾಡಲು ಕೂಡ ಯೋಗ್ಯವಲ್ಲ ಎನ್ನುವ ದೂರುಗಳು ಜನರಿಂದ ವ್ಯಾಪಕವಾಗಿ ಬರುತ್ತಿವೆ. ಹೀಗಾಗಿ ಅಗತ್ಯ ಮುಂಜಾಗ್ರತಾ ಕ್ರಮಗಳ ಕಡೆಗೆ ಹೆಚ್ಚು ಒತ್ತು ನೀಡಿ ಎಂದು ಸ್ಪಷ್ಟ ಎಚ್ಚರಿಕೆ ನೀಡಿದರು.

ಅನಾಹುತಗಳನ್ನು ತಪ್ಪಿಸಲು ಹೆಚ್ಚಿನ ಗಮನ ನೀಡಬೇಕು. ಜಿಲ್ಲಾಧಿಕಾರಿಗಳು ಪದೇ ಪದೇ ಪ್ರವಾಹವಾಗುವ ಸ್ಥಳಗಳಲ್ಲಿ ಜನರಿಗೆ ಮನವರಿಕೆ ಮಾಡಿ ಸ್ಥಳಾಂತರ ಮಾಡಿ ಜೀವಹಾನಿ ತಪ್ಪಿಸಬೇಕು ಎಂದು ಸೂಚಿಸಿದರು.

ನೆರೆ ಬಂದು ನೀರು ಹೆಚ್ಚಾದರೆ ಅದರ ಬಳಿ ಜನರು ಹೋಗದಂತೆ ಜಿಲ್ಲಾಡಳಿತ ಕ್ರಮ ವಹಿಸಲು ಸೂಚಿಸಿದರು. ಜನರಿಗೆ ಈ ಬಗ್ಗೆ ಎಚ್ಚರಿಕೆ ನೀಡುವುದು ಹಾಗೂ ಅರಿವು ಮೂಡಿಸುವ ಕೆಲಸ ಮಾಡಿ ಪ್ರಾಣಹಾನಿಯನ್ನು ತಪ್ಪಿಸಬೇಕು ಎಂದರು.

*ಭೂ ಕುಸಿತದ ಸಾಧ್ಯತೆ ಮೊದಲೇ ಗೊತ್ತಿರುತ್ತದೆ*

ಭೂ ಕುಸಿತ ಆಗಬಹುದಾದ ಸ್ಥಳಗಳ ಬಗ್ಗೆ ಒಂದು ಹಂತಕ್ಕೆ ಅಧಿಕಾರಿಗಳಿಗೆ ಮೊದಲೇ ಮಾಹಿತಿ ಇರುತ್ತದೆ. ಪೊಲೀಸ್, ಕಂದಾಯ, ನೀರಾವರಿ, ಗ್ರಾಮೀಣಾಭಿವೃದ್ಧಿ ಇಲಾಖೆಗಳ ಮಧ್ಯೆ ಸಮನ್ವಯವಿದ್ದರೆ ಸಾಕಷ್ಟು ಜೀವಹಾನಿ ತಪ್ಪಿಸಬಹುದು. ಮಣ್ಣು ಕುಸಿತವಾಗುವ ಸ್ಥಳಗಳ ಬಗ್ಗೆ ಇಲಾಖೆಗಳಿಗೆ ಮಾಹಿತಿ ಇರುತ್ತದೆ. ಕಾಳಜಿಯಿಂದ ವರ್ತಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಉಡುಪಿ ಜಿಲ್ಲೆಯಲ್ಲಿ ಬಹಳ ಮೊದಲೇ ವಾರ್ ರೂಂಗಳನ್ನು ತೆಗೆಯಲಾಗಿತ್ತು. ಇದರಿಂದ ಸಾಕಷ್ಟು ಅನಾಹುತಗಳನ್ನು ತಪ್ಪಿಸಿದ್ದೇವೆ. ಆದರೆ ಕೈ ಸಂಕದಿಂದ ಹಾಗೂ ಇತರೆ ಮಳೆ ಅಪಘಾತಗಳಿಂದ 9 ಸಾವು ಸಂಭವಿಸಿದೆ ಎಂದು ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಈ ವೇಳೆ ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಮುಂಜಾಗ್ರತಾ ಕ್ರಮದ ಬಗ್ಗೆ ಮೆಚ್ಚುಗೆ ಸೂಚಿಸಿದ ಮುಖ್ಯಮಂತ್ರಿಗಳು ಇದೇ ಕ್ರಮ ಎಲ್ಲಾ ಜಿಲ್ಲೆಗಳಲ್ಲೂ ಅಗತ್ಯ ಎಂದರು.

ಜನವರಿ ಒಂದರಿಂದ ಜುಲೈ 25 ರವರೆಗೆ 64 ಜನ ಮರಣಹೊಂದಿದ್ದಾರೆ. ಇವರಿಗೆ ತುರ್ತಾಗಿ ಪರಿಹಾರ ಒದಗಿಸಲಾಗಿದೆ. ಆದರೆ ಜಿಲ್ಲಾಡಳಿತ ಅಲರ್ಟ್ ಆಗಿದ್ದರೆ ಈ ಅನಾಹುತಗಳಲ್ಲಿ ಸಾಕಷ್ಟನ್ನು ತಪ್ಪಿಸಬಹುದಿತ್ತಲ್ಲವೇ ಎಂದು ಜಿಲ್ಲಾಧಿಕಾರಿಗಳಿಗೆ ಪ್ರಶ್ನಿಸಿದರು.

ಸಂಬಂಧಪಟ್ಟ ಅಧಿಕಾರಿಗಳು ಮಳೆ ಸಾಧ್ಯತೆ, ಮಳೆಯ ಬಿರುಸಿನ ಬಗ್ಗೆ ಪ್ರತಿದಿನ ಪತ್ರಿಕಾ ಗೋಷ್ಠಿ ನಡೆಸಬೇಕು. ಕಾಲು ಜಾರುವ ಕಡೆಗಳಲ್ಲಿ ಹೋಗಬಾರದು, ತುಂಬಿ ಹರಿವ ನದಿಗಳನ್ನು ಹಾಯಬಾರದು ಎಂದು ಸೂಚಿಸಬೇಕು. ಸಾವು ತಡೆಗಟ್ಟಲು ಹೆಚ್ಚಿನ ಶ್ರಮವಹಿಸಬೇಕು ಎಂದರು.

ಅಂಗನವಾಡಿ, ಶಾಲಾ ಕಟ್ಟಡಗಳು, ಆಸ್ಪತ್ರೆಗಳ ಕಟ್ಟಡ ಶಿಥಿಲ ಆಗಿವೆ ಎನ್ನುವ ಮಾಹಿತಿ ಮೊದಲೇ ಗೊತ್ತಿರುತ್ತದೆ. ಯಾವ ಕಟ್ಟಡಗಳಲ್ಲಿ ಸೋರಿಕೆ ಆಗುತ್ತಿದೆ ಎನ್ನುವ ಮಾಹಿತಿಯೂ ಮೊದಲೇ ಗೊತ್ತಿರುತ್ತದೆ. ದುರಸ್ತಿ, ಸ್ಥಳಾಂತರ, ರಿಪೇರಿಗೆ ಸಾಕಷ್ಟು ಹಣ ಮೀಸಲಿಟ್ಟಿದ್ದರೂ ಈ ಬಗ್ಗೆ ಮೊದಲೇ ಕ್ರಮ ಏಕೆ ಕೈಗೊಳ್ಳುತ್ತಿಲ್ಲ ಎಂದು ಖಾರವಾಗಿ ಪ್ರಶ್ನಿಸಿದ ಮುಖ್ಯಮಂತ್ರಿಗಳು ಇಂತಹ ಉದಾಸೀನ ಮತ್ತು ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವೇ ಇಲ್ಲ ಎಂದು ಎಚ್ಚರಿಸಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಜಿ.ಪರಮೇಶ್ವರ್, ಚೆಲುವರಾಯಸ್ವಾಮಿ, ಕೃಷ್ಣಬೈರೇಗೌಡ, ಎಂ.ಸಿ.ಸುಧಾಕರ್, ಲಕ್ಷ್ಮಿ ಹೆಬ್ಬಾಳ್ಕರ್, ಪ್ರಿಯಾಂಕ ಖರ್ಗೆ,ಈಶ್ವರ್ ಖಂಡ್ರೆ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ (ವಿಪತ್ತು ನಿರ್ವಹಣೆ) ವಿ. ರಶ್ಮಿ , ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

*ವಿಡಿಯೋ ಸಂವಾದದ ಮುಖ್ಯಾಂಶಗಳು*

*ರಾಜ್ಯದಲ್ಲಿ ಜೂನ್‌ ತಿಂಗಳಿನಲ್ಲಿ ಭಿಪರ್‌ ಜಾಯ್‌ ಚಂಡಮಾರುತದ ಕಾರಣದಿಂದಾಗಿ ಶೇ. 56 ರಷ್ಟು ಮಳೆ ಕೊರತೆ ಕಂಡು ಬಂತು*

*ಆದರೆ ಜುಲೈ ತಿಂಗಳಿನಲ್ಲಿ ಇಲ್ಲಿಯವರೆಗೆ ವಾಡಿಕೆ ಮಳೆ 228 ಮಿ.ಮೀ. ನಷ್ಟಿದೆ. ಆದರೆ ರಾಜ್ಯದಲ್ಲಿ 313 ಮಿ.ಮೀ. ಮಳೆ ಆಗಿದೆ. ಇದು ವಾಡಿಕೆ ಮಳೆಗಿಂತ ಶೇ. 37 ರಷ್ಟು ಹೆಚ್ಚಾಗಿದೆ*

*ಜುಲೈ ತಿಂಗಳಿನಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ಜೂನ್‌ ಅಂತ್ಯಕ್ಕೆ ಇದ್ದ ಮಳೆ ಕೊರತೆಯು ಕಡಿಮೆಯಾಗಿದೆ. ಮಳೆ ಕೊರತೆ ಕಂಡು ಬಂದ ತಾಲ್ಲೂಕುಗಳ ಸಂಖ್ಯೆ ಇಳಿಕೆಯಾಗಿದೆ. ಪ್ರಸ್ತುತ ಜೂನ್‌ 1 ರಿಂದ ಈ ವರೆಗೆ ನಾಲ್ಕು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಿದ್ದು, 21 ಜಿಲ್ಲೆಗಳಲ್ಲಿ ವಾಡಿಕೆ ಮಳೆಯಾಗಿದೆ. 6 ಜಿಲ್ಲೆಗಳಲ್ಲಿ ಮಳೆ ಕೊರತೆಯಾಗಿದೆ*

*ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಮುಂದಿನ ಒಂದು ವಾರದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದ್ದು, ಮಳೆ ಕೊರತೆಯಿರುವ ತಾಲ್ಲೂಕುಗಳ ಸಂಖ್ಯೆ ಇಳಿಕೆಯಾಗಲಿದೆ*

*ಬಹುತೇಕ ಎಲ್ಲ ಜಲಾಶಯಗಳಲ್ಲಿ ನೀರು ಬಹುತೇಕ ಭರ್ತಿಯಾಗುತ್ತಿವೆ. ಕಳೆದ ಒಂದು ವಾರದಲ್ಲಿ ಒಟ್ಟು ಸಂಚಿತ ಒಳಹರಿವು 227 ಟಿಎಂಸಿಯಷ್ಟಾಗಿದೆ*

*ಜೂನ್‌ 1 ರಿಂದ ಈ ವರೆಗೆ ರಾಜ್ಯದಲ್ಲಿ ನೀರಿನಲ್ಲಿ ಸಿಲುಕಿ, ಸಿಡಿಲು ಬಡಿದು, ಮನೆ ಕುಸಿದು, ಮರ ಬಿದ್ದು ಹಾಗೂ ಭೂಕುಸಿತದಿಂದ ಒಟ್ಟು 38 ಮಾನವ ಜೀವಹಾನಿ ಆಗಿದೆ. 35 ಜನರು ಗಾಯಗೊಂಡಿದ್ದಾರೆ*

*ರಾಜ್ಯದಲ್ಲಿ 57 ಮನೆಗಳು ಸಂಪೂರ್ಣವಾಗಿ, 208 ಮನೆಗಳು ತೀವ್ರವಾಗಿ ಹಾಗೂ 2682 ಮನೆಗಳು ಭಾಗಶಃ ಹಾನಿಯಾಗಿದೆ*

*ಮಳೆಯಿಂದಾಗಿ 105 ಜಾನುವಾರುಗಳು ಮೃತಪಟ್ಟಿವೆ*

*185 ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಬೆಳೆ ಹಾಗೂ 356 ಹೆಕ್ಟೇರ್‌ ಪ್ರದೇಶದಲ್ಲಿ ತೋಟಗಾರಿಕೆ ಬೆಳೆಗಳು- ಒಟ್ಟು 541.39 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಜಲಾವೃತಗೊಂಡಿದೆ*

*407 ಕಿ.ಮೀ. ರಾಜ್ಯ ಹೆದ್ದಾರಿ, 425 ಕಿ.ಮೀ. ಜಿಲ್ಲಾ ಹೆದ್ದಾರಿ, ಗ್ರಾಮೀಣ ರಸ್ತೆಗಳು 1277 ಕಿ.ಮೀ. ಒಟ್ಟು 2109 ಕಿ.ಮೀ. ರಸ್ತೆ ಹಾನಿಯಾಗಿದೆ*

*189 ಸೇತುವೆಗಳು, 889 ಶಾಲಾ ಕೊಠಡಿಗಳು, 8 ಪ್ರಾಥಮಿಕ ಕೇಂದ್ರಗಳು, 269 ಅಂಗನವಾಡಿ ಕೇಂದ್ರಗಳು ಹಾನಿಯಾಗಿರುವುದು ವರದಿಯಾಗಿದೆ*

*11,995 ವಿದ್ಯುತ್‌ ಕಂಬಗಳು, 894 ಟ್ರಾನ್ಸ್‌ಫಾರ್ಮರ್‌ ಗಳು ಹಾನಿಯಾಗಿದ್ದು, 215 ಕಿ.ಮೀ. ಉದ್ದದ ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ*

*ಪ್ರಸ್ತುತ ಎರಡು ಪರಿಹಾರ ಶಿಬಿರ ಗಳಲ್ಲಿ 50 ಜನರಿಗೆ ಆಶ್ರಯ ನೀಡಲಾಗಿದೆ*

*ಜೂನ್‌ ತಿಂಗಳಿನಲ್ಲಿ ಮಳೆ ಕೊರತೆಯಾದ್ದರಿಂದ ಮುಂಗಾರು ಹಂಗಾಮಿನಲ್ಲಿ ಈ ವರೆಗೆ ಶೇ. 53 ರಷ್ಟು ಬಿತ್ತನೆಯಾಗಿದೆ. ವಾಡಿಕೆಯಂತೆ ಶೇ. 83 ರಷ್ಟು ಬಿತ್ತನೆಯಾಗಿದೆ*

*ರಾಜ್ಯದಲ್ಲಿ 156 ಲಕ್ಷ ಟನ್‌ ಮೇವು ದಾಸ್ತಾನು ಇದ್ದು, ಮುಂದಿನ 29 ವಾರಗಳಲ್ಲಿ ಸಾಕಾಗುವಷ್ಟಿದೆ*

*ಸಮನ್ವಯಿಂದ ಅನಾಹುತ ತಡೆಯಿರಿ*

ಹಿಂದಿನ ವರ್ಷಗಳ ಅನುಭವ ಮತ್ತು ಅನಾಹುತಗಳಿಂದ ಬಹಳಷ್ಟು ಸಾವಿನ, ಅಪಘಾತ ಪ್ರಕರಣಗಳನ್ನು ತಡೆಯಲು ಸಾಧ್ಯವಿದೆ. ಕೃಷಿ, ಗ್ರಾಮೀಣಾಭಿವೃದ್ಧಿ, ಜಿಲ್ಲಾಡಳಿತ, ಪೊಲೀಸ್ ಹಾಗೂ ಇನ್ನಿತರೆ ಇಲಾಖೆಗಳ ನಡುವಿನ ಸಮನ್ವಯತೆಯಿಂದ ಸಾವು, ಮಳೆ ಅಪಘಾತ ಪ್ರಕರಣಗಳನ್ನು ತಡೆಯಲು ಸಾಧ್ಯವಿದೆ. ಈ ದಿಕ್ಕಿನಲ್ಲಿ ಸೂಕ್ತ ಕ್ರಮ ವಹಿಸಿ ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದರು.

 

*ಅನುದಾನದ ಕೊರತೆ ಇಲ್ಲ*
ಪ್ರತಿ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಅನುದಾನ ಲಭ್ಯವಿದೆ. ಎಸ್.ಡಿ.ಆರ್.ಎಫ್ ನ ಅಡಿಯೂ ಅನುದಾನದ ಲಭ್ಯತೆ ಇದೆ . ದುರಸ್ತಿಗೆ ತಕ್ಷಣ ಕ್ರಮ ವಹಿಸಿ. ಹೆಚ್ಚಿನ ಅನುದಾನ ಅಗತ್ಯವಿದ್ದರೆ ಮನವಿ ಕಳುಹಿಸಿ.
ಜಿಲ್ಲೆಯ ಎಲ್ಲಾ ಆಗುಹೋಗುಗಳ ಮೇಲೆ ಜಿಲ್ಲಾ ಉಸ್ತುವಾರಿ ಸಚಿವರು ನಿಗಾ ವಹಿಸಿ.
ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಜಿಲ್ಲಾ ಕೇಂದ್ರಗಳಲ್ಲಿಯೇ ಉಳಿಯಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

*ಕಡಲು ಕೊರೆತ*
ಕಡಲು ಕೊರೆತ ತಡೆಯಲು ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ. ಈ ಬಗ್ಗೆ ಪ್ರತ್ಯೇಕ ಸಭೆ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

*ಪರ್ಯಾಯ ರಸ್ತೆ*
ಬೆಳಗಾವಿ ಜಿಲ್ಲೆಯಲ್ಲಿ 12 ಸೇತುವೆಗಳ ಸಂಪರ್ಕ ಕಡಿತಗೊಂಡಿದೆ. ಪ್ರತಿ ವರ್ಷ ತಗ್ಗು ಪ್ರದೇಶಗಳಲ್ಲಿ ನೀರು ತುಂಬುವುದರಿಂದ ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪರ್ಯಾಯ ರಸ್ತೆ ನಿರ್ಮಾಣ ಮಾಡಲು ಕಡಿಮೆ ಜನರಿರುವ ಗ್ರಾಮಗಳನ್ನು ಸ್ಥಳಾಂತರ ಮಾಡಬೇಕು ಎಂದು ಮುಖ್ಯಮಂತ್ರಿಗಳು ಸಲಹೆ ನೀಡಿದರು.

*ಹೊಸ ಕೆಲಸಗಳಿಗೆ ನಿರ್ಬಂಧವಿಲ್ಲ*

ಎಸ್.ಡಿ.ಆರ್.ಎಫ್ ಹಾಗೂ ಎನ್.ಡಿ.ಆರ್.ಎಫ್ ಅಡಿ ಆಗಿರುವ ಕೆಲಸಕ್ಕೆ ಹಣ ಪಾವತಿ ಮಾಡಲು ಯಾವುದೇ ನಿರ್ಬಂಧವಿಲ್ಲ. ಹೊಸ ಕಾಮಗಾರಿಗಳನ್ನು ಅಗತ್ಯಕ್ಕೆ ಅನುಗುಣವಾಗಿ ಕೂಡಲೇ ತೆಗೆದುಕೊಳ್ಳಲು ನಿರ್ಬಂಧವಿಲ್ಲ ಎಂದು ತಿಳಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ