ಚಿತ್ರದುರ್ಗ : ಹೊಸದುರ್ಗ ತಾಲ್ಲೂಕು ವ್ಯಾಪ್ತಿಯಲ್ಲಿನ ಸಮಾಜ ಕಲ್ಯಾಣ ಇಲಾಖೆಯಡಿ ಬರುವ ಸರ್ಕಾರಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳ 2026-27ನೇ ಸಾಲಿನ ಪ್ರವೇಶಾತಿ ಪ್ರಕ್ರಿಯೆ ಪ್ರಾರಂಭವಾಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರ ಜನಾಂಗದ ಅರ್ಹ ವಿದ್ಯಾರ್ಥಿಗಳು ಪ್ರವೇಶಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್ https://www.sw.kar.nic.in ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿಬಹದು.
ಇದೇ ವೇಳೆ, 2026ನೇ ಸಾಲಿನಲ್ಲಿ ಪ್ರಥಮ ಪ್ರಯತ್ನದಲ್ಲೇ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನೀಡಲಾಗುವ ಪ್ರತಿಭಾ ಪುರಸ್ಕಾರ ಪ್ರೋತ್ಸಾಹಧನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿ ಮತ್ತು ವಿವರಗಳಿಗಾಗಿ ವಿದ್ಯಾರ್ಥಿಗಳು ಹೊಸದುರ್ಗದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ (ಗ್ರೇಡ್-2) ಕಚೇರಿಗೆ ನೇರವಾಗಿ ಭೇಟಿ ನೀಡಬಹುದಾಗಿದೆ. ದೂರವಾಣಿ ಸಂಖ್ಯೆ 08199-230050 ಕರೆ ಮಾಡಬಹುದು ಎಂದು ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಂತ್ರಿಕ ಮತ್ತು ವೈದ್ಯಕೀಯ ಸ್ನಾತಕ ಪದವಿ ವಿದ್ಯಾಭ್ಯಾಸಕ್ಕಾಗಿ ಅರ್ಜಿ ಆಹ್ವಾನ
ಚಿತ್ರದುರ್ಗ : ಭಾರತೀಯ ಸೇನೆ ಹಾಗೂ ಒಡಿಶಾದ ಭುವನೇಶ್ವರದಲ್ಲಿರುವ ‘ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರೀಯಲ್ ಟೆಕ್ನಾಲಜಿ’ (ಕೆ.ಐ.ಐ.ಟಿ) ಸಂಸ್ಥೆಗಳ ನಡುವಿನ ಒಪ್ಪಂದದನ್ವಯ 2026-27ನೇ ಸಾಲಿನ ತಾಂತ್ರಿಕ ಮತ್ತು ವೈದ್ಯಕೀಯ ಪದವಿ ವಿದ್ಯಾಭ್ಯಾಸಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸೈನಿಕರು, ಮಾಜಿ ಸೈನಿಕರು ಹಾಗೂ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಹುತಾತ್ಮ ಯೋಧರ ಅವಲಂಬಿತರಿಗೆ ಈ ವಿಶೇಷ ಶೈಕ್ಷಣಿಕ ಸೌಲಭ್ಯವನ್ನು ಕಲ್ಪಿಸಲಾಗುತ್ತಿದ್ದು, ಪ್ರಸಕ್ತ ಸಾಲಿನಿಂದ 2030-31ರ ವರೆಗಿನ ಐದು ಶೈಕ್ಷಣಿಕ ವರ್ಷಗಳ ಅವಧಿಗೆ ಈ ಒಪ್ಪಂದ ಅನ್ವಯಿಸಲಿದೆ.
ಈ ಯೋಜನೆಯಡಿ ಟ್ಯೂಷನ್ ಫೀಸ್ನಲ್ಲಿ 10 ಪ್ರತಿಶತ ವಿದ್ಯಾರ್ಥಿವೇತನದೊಂದಿಗೆ 2 ಎಂ.ಬಿ.ಬಿ.ಎಸ್, 5 ಬಿ.ಡಿ.ಎಸ್ (ದಂತ ವೈದ್ಯಕೀಯ) ಮತ್ತು 5 ಬಿ.ಎಸ್ಸಿ ನಸಿರ್ಂಗ್ ಸೀಟುಗಳನ್ನು ಕಾಯ್ದಿರಿಸಲಾಗಿದೆ. ಹಾಗೆಯೇ 50 ಪ್ರತಿಶತ ವಿದ್ಯಾರ್ಥಿವೇತನದೊಂದಿಗೆ 4 ಬಿ.ಟೆಕ್ ಕಂಪ್ಯೂಟರ್ ಸೈನ್ಸ್ ಸೀಟುಗಳು ಲಭ್ಯವಿವೆ. ಇವುಗಳನ್ನು ಹೊರತುಪಡಿಸಿ ಕೆ.ಐ.ಐ.ಟಿ ಸಂಸ್ಥೆಯಲ್ಲಿ ಲಭ್ಯವಿರುವ ಇತರ ಕೋರ್ಸ್ಗಳಿಗೆ ಎಷ್ಟು ಸಂಖ್ಯೆಯಲ್ಲಾದರೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಸೈನಿಕ, ಮಾಜಿ ಸೈನಿಕ ಅವಲಂಬಿತರಿಂದ ವೈದ್ಯಕೀಯ/ದಂತ ವೈದ್ಯಕೀಯ ಮತ್ತು ತಾಂತ್ರಿಕ ವಿದ್ಯಾಭ್ಯಾಸಗಳಿಗೆ ಎಷ್ಟು ಅರ್ಜಿಗಳು ಸ್ವೀಕೃತಗೊಳ್ಳುತ್ತವೆಯೆಂಬುದರ ಮೇರೆಗೆ ಯುದ್ಧ/ಯುದ್ಧದಂತಹ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಯೋಧರ ಅವಲಂಬಿತರುಗಳ ಟ್ಯೂಷನ್ ಫೀಯಲ್ಲಿ ಗರಿಷ್ಟ 5 ಸೀಟುಗಳಿಗೆ 100 ಪ್ರತಿಶತ ವಿನಾಯಿತಿ ಇರುತ್ತದೆ. ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಜಾಲತಾಣ “kiit.ac.in” ಅನ್ನು ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.