ಚೆನ್ನೈ: ದಕ್ಷಿಣ ಭಾರತ ಚಿತ್ರರಂಗದಲ್ಲಿ ಭಾರಿ ಚರ್ಚೆಗೆ ಕಾರಣವಾಗಿರುವ ತಮಿಖು ನಟ ದಳಪತಿ ವಿಜಯ್ ಹಾಗೂ ಪತ್ನಿ ಸಂಗೀತಾ ವಿಚ್ಛೇದನ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಚೆಂಗಲ್ಪಟ್ಟು ಕೌಟುಂಬಿಕ ನ್ಯಾಯಾಲಯವು ವಿಚಾರಣೆಯನ್ನು ಎರಡನೇ ಬಾರಿಗೆ ಮುಂದೂಡಿದೆ.
ವಿಜಯ್ ಮತ್ತು ಸಂಗೀತಾ ಅವರ ವಿಚ್ಛೇದನ ಪ್ರಕರಣದ ವಿಚಾರಣೆ ಇಂದು ನ್ಯಾಯಾಧೀಶರಾದ ಶಶಿಕಲಾ ಅವರ ಮುಂದೆ ಬಂದಿತ್ತು. ಅಲ್ಪ ಸಮಯದ ವಿಚಾರಣೆ ನಡೆಸಿದ ನ್ಯಾಯಾಧೀಶರು, ಪ್ರಕರಣವನ್ನು ಜೂನ್ 15ಕ್ಕೆ ಮುಂದೂಡಿ ಆದೇಶ ಹೊರಡಿಸಿದ್ದಾರೆ.
ಫೆಬ್ರವರಿ 26ರಂದು ಸಂಗೀತಾ ಅವರು ವಿಚ್ಛೇದನ ಕೋರಿ ಮೊದಲ ಬಾರಿ ಅರ್ಜಿ ಸಲ್ಲಿಸಿದ್ದರು. ಆನಂತರ ಪ್ರಕರಣವನ್ನು ಏಪ್ರಿಲ್ 20ಕ್ಕೆ ನಿಗದಿಪಡಿಸಲಾಗಿತ್ತು. ಈಗ ಎರಡನೇ ಬಾರಿ ಮುಂದೂಡಲ್ಪಟ್ಟಿದೆ.
ಸಂಗೀತಾ ಸಲ್ಲಿಸಿರುವ ವಿಚ್ಛೇದನ ಅರ್ಜಿಯಲ್ಲಿ ನಟ ವಿಜಯ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ವಿಜಯ್ ಅವರು ಬೇರೊಬ್ಬ ನಟಿಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಅವರು ದೂರಿದ್ದಾರೆ. 2021ರಲ್ಲಿ ವಿಜಯ್ ಅವರಿಗೆ ನಟಿಯೊಬ್ಬರ ಜೊತೆ ಸಂಬಂಧವಿರುವುದು ನನಗೆ ತಿಳಿಯಿತು. ಈ ನಂಬಿಕೆ ದ್ರೋಹದಿಂದ ನನಗೆ ತೀವ್ರ ಮಾನಸಿಕ ನೋವು ಉಂಟಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. 2021ರಿಂದ ವಿಜಯ್ ತಮ್ಮೊಂದಿಗೆ ಸರಿಯಾಗಿ ಮಾತನಾಡುತ್ತಿಲ್ಲ ಮತ್ತು ಭಾವನಾತ್ಮಕವಾಗಿ ದೂರವಾಗಿದ್ದಾರೆ ಎಂದು ಸಂಗೀತಾ ಆರೋಪಿಸಿದ್ದಾರೆ.
ವಿಜಯ್ ಮತ್ತು ಸಂಗೀತಾ 1999ರ ಆಗಸ್ಟ್ ತಿಂಗಳಲ್ಲಿ ವಿವಾಹವಾಗಿದ್ದರು. ಹಿಂದೂ ಮತ್ತು ಕ್ರಿಶ್ಚಿಯನ್ ಸಂಪ್ರದಾಯದಂತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈ ದಂಪತಿಗೆ ಜೇಸನ್ ಸಂಜಯ್ ಮತ್ತು ದಿವ್ಯಾ ಶಾಶಾ ಎಂಬ ಇಬ್ಬರು ಮಕ್ಕಳಿದ್ದಾರೆ. ಕಳೆದ 25 ವರ್ಷಗಳಿಂದ ಅನ್ಯೋನ್ಯವಾಗಿದ್ದ ಈ ಜೋಡಿ ಈಗ ಬೇರ್ಪಡುತ್ತಿರುವುದು ಅಭಿಮಾನಿಗಳಿಗೆ ಆಘಾತ ತಂದಿದೆ.