Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಬೆಂಗಳೂರಿನಿಂದ ಶಿವಮೊಗ್ಗ ವಿಮಾಣ ನಿಲ್ದಾಣಕ್ಕೆ ಬಂದಿಳಿಯಿತು ಪ್ರಥಮ ವಿಮಾನ

 

ಶಿವಮೊಗ್ಗ :
ವಿಮಾನಯಾನ ಆರಂಭದಿಂದಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಅಭಿವೃದ್ದಿಯ ವಿನೂತನ ಅಧ್ಯಾಯ ಆರಂಭವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ದಿ ಸಚಿವ ಎಂ.ಬಿ.ಪಾಟೀಲ ಹೇಳಿದರು.

ಇಂದು ಸೋಗಾನೆಯ ವಿಮಾನ ನಿಲ್ದಾಣದಲ್ಲಿ ವಾಣಿಜ್ಯ ವಿಮಾನಯಾನ ಕಾರ್ಯಾಚರಣೆ ಮತ್ತು ಅಧಿಕೃತ ಜಾಲತಾಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇದು ರಾಜ್ಯದ ಮಲೆನಾಡು ಭಾಗದಲ್ಲಿ ನಿರ್ಮಾಣವಾಗಿರುವ ಪ್ರಪ್ರಥಮ ವಿಮಾನ ನಿಲ್ದಾಣವಾಗಿದ್ದು ರೂ.450 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದೆ. ರಸಋಷಿ ಕುವೆಂಪು ಅವರ ಹೆಸರನ್ನು ಹೊರಲಿರುವ ಈ ವಿಮಾನ ನಿಲ್ದಾಣದಿಂದ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಚಿತ್ರದುರ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳ ಜನರಿಗೆ ಅನುಕೂಲವಾಗಲಿದೆ. ಈ ಮೂಲಕ ಮಲೆನಾಡು ಮತ್ತು ಮಧ್ಯಮ ಕರ್ನಾಟಕದ ಆರ್ಥಿಕ, ಕೈಗಾರಿಕಾ ಮತ್ತು ಶೈಕ್ಷಣಿಕ ಬೆಳವಣಿಗೆ ಆಗಲಿದೆ ಎಂದರು.
ಮುಂದಿನ ಒಂದು ವರ್ಷ ಕಾಲ ಶಿವಮೊಗ್ಗ- ಬೆಂಗಳೂರು ನಡುವೆ ಪ್ರಯಾಣಿಸುವ ಪ್ರತಿಯೊಬ್ಬರ ಟಿಕೆಟ್ ಮೇಲೆ ₹500 ರುಪಾಯಿ ರಾಜ್ಯ ಸರ್ಕಾರ ಸಬ್ಸಿಡಿ ನೀಡಲಿದೆ ಎಂದು ಸಚಿವರು ಘೋಷಿಸಿದರು.

779 ಎಕರೆ ವಿಸ್ತಾರದಲ್ಲಿ ನಿರ್ಮಿಸಿರುವ ವಿಮಾನ ನಿಲ್ದಾಣದಲ್ಲಿ ಮೂಲಯೋಜನೆಯ ವಿನ್ಯಾಸವನ್ನು ಪರಿಷ್ಕರಿಸಿ, ಏರ್‌ಬಸ್ ಮಾದರಿಯ ವಿಮಾನಗಳು ಕೂಡ ಬಂದಿಳಿಯುವ ಮತ್ತು ರಾತ್ರಿ ವೇಳೆ ಇಳಿಯುವ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ.
ಸದ್ಯಕ್ಕೆ ಇಲ್ಲಿಂದ ಬೆಂಗಳೂರಿಗೆ ಕನೆಕ್ಟಿಂಗ್ ವಿಮಾನಯಾನ ಸೇವೆ ಲಭ್ಯವಾಗಲಿದೆ. ಬೆಂಗಳೂರಿನಿಂದ ಚೆನ್ನೈ, ಮುಂಬೈ ಮತ್ತು ದೆಹಲಿಗೆ ತೆರಳಲಿರುವ ಇಂಡಿಗೋ ಸಂಸ್ಥೆಯ ವಿಮಾನಗಳ ಮೂಲಕ ಪ್ರಯಾಣವನ್ನು ಮುಂದುವರಿಸಬಹುದು. ಉಡಾನ್ ಯೋಜನೆಯಡಿ ಟೆಂಡರ್ ಪ್ರಕ್ರಿಯೆ ಮುಗಿದಿದ್ದು ಸದ್ಯದಲ್ಲೇ ಅಧಿಕೃತವಾಗಿ ಪ್ರಕಟಿಸಲಾಗುತ್ತದೆ. ಮುಂದಿನ ದಿನಗಳಲ್ಲಿ ದೆಹಲಿ, ಹೈದರಾಬಾದ್ ಸೇರಿದಂತೆ ದೇಶದ ನಾನಾ ನಗರಗಳಿಗೆ ಇಲ್ಲಿಂದ ನೇರ ವಿಮಾನಯಾನ ಆರಂಭಿಸಲಾಗುವುದು ಎಂದ ಅವರು ರಾಜ್ಯ ಸರ್ಕಾರದಿಂದಲೇ ವಿಮಾನ ನಿಲ್ದಾಣ ನಿರ್ವಹಣೆ ಮಾಡುವ ಯೋಜನೆಯಿದ್ದು ಶಿವಮೊಗ್ಗ ವಿಮಾನ ನಿಲ್ದಾಣದಿಂದ ಪ್ರಥಮವಾಗಿ ನಿರ್ವಹಣೆ ಆರಂಭವಾಗಲಿದೆ. ಇದರಿಂದ ಸರ್ಕಾರಕ್ಕೆ ಆದಾಯ ಮತ್ತು ಆಸ್ತಿ ಉಳಿಯಲಿದೆ. ಈ ಕುರಿತು ಸಾಧಕ-ಬಾಧಕಗಳನ್ನು ತಿಳಿದು ಮುನ್ನಡೆಯುತ್ತೇವೆ ಎಂದರು.

ರಸ್ತೆ-ರೈಲ್ವೆ-ಏರ್‍ವೇ ಇಂದ ಆರ್ಥಿಕ, ಔದ್ಯೋಗಿಕ ಬೆಳವಣಿಗೆ ಸಾಧ್ಯವಾಗಿದ್ದು, ಮುಂದಿನ ದಿನಗಳಲ್ಲಿ ಶಿವಮೊಗ್ಗದಲ್ಲಿ ರೈತರ ಸಹಕಾರದೊಂದಿಗೆ ಕೈಗಾರಿಕೆಗಳನ್ನು ತರುವ ಉದ್ದೇಶ ಇದೆ ಎಂದರು.

ಜೊತೆಗೆ, ಯೋಜನೆಯ ಕನಸು ಕಂಡು, ಅದರ ಅನುಷ್ಠಾನಕ್ಕೆ ಶ್ರಮಿಸಿದ ಯಡಿಯೂರಪ್ಪ ಮತ್ತು ಉಳಿದವರ ಪ್ರಯತ್ನಗಳನ್ನು ಉಲ್ಲೇಖಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಮಾತನಾಡಿ, ವಿಮಾನ ನಿಲ್ದಾಣಕ್ಕಾಗಿ ಶ್ರಮಿಸಿದ ಎಲ್ಲ ಜನಪ್ರತಿನಿಧಿಗಳು ಮತ್ತು ಭೂಮಿ ನೀಡಿದ ರೈತರಿಗೆ ಧನ್ಯವಾದಗಳು. ಮುಂದಿನ ದಿನಗಳಲ್ಲಿ ಪ್ರವಾಸೋದ್ಯಮ, ಕೈಗಾರಿಕೆಗಳಿಗೆ ನೆರವು ಸೇರಿದಂತೆ ಜಿಲ್ಲೆಯ ಅಭಿವೃದ್ದಿಗೆ ಸಹಕರಿಸಲಾಗುವುದು. ಹಾಗೂ ಜನಸಾಮಾನ್ಯರು, ಬಡವರು ವಿಮಾನ ನಿಲ್ದಾಣದಲ್ಲಿ ಹಾರಾಡುವ ವ್ಯವಸ್ಥೆ ಮಾಡುತ್ತೇವೆಂಬ ವಿಶ್ವಾಸ ಇದೆ ಎಂದ ಅವರು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು ಜಿಲ್ಲೆಯಲ್ಲಿ ಕೈಗಾರಿಕೆಗೆ ಹೆಚ್ಚಿನ ಸಹಕಾರ ನೀಡಲಿದ್ದಾರೆಂಬ ಭರವಸೆ ವ್ಯಕ್ತಪಡಿಸಿದರು.

ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಸಹ್ಯಾದ್ರಿ ನಗರಕ್ಕೆ ಲೋಹದ ಹಕ್ಕಿಯ ಆಗಮನ ಆಗಿದೆ. ಇದಕ್ಕೆ ಕಾರಣಕರ್ತರಾದ ಎಲ್ಲರಿಗೂ ಹಾಗೂ ಭೂಮಿ ನೀಡಿದ ರೈತರಿಗೆ ಧನ್ಯವಾದಗಳನ್ನು ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಶಿವಮೊಗ್ಗ ಜಿಲ್ಲೆಯ ಬಹು ವರ್ಷಗಳ ವಿಮಾನ ನಿಲ್ದಾಣದ ಕನಸು ನಿಮ್ಮೆಲ್ಲರ ಬೆಂಬಲದಿಂದ ನನಸಾಗಿದೆ. ಕೈಗಾರಿಕೆ ಬೆಳವಣಿಗೆ, ಉದ್ಯೋಗ ಸೃಷ್ಟಿಗೆ ಉತ್ತಮ ಅವಕಾಶಗಳು ತೆರೆದುಕೊಳ್ಳಲಿವೆ. ನಿಲ್ದಾಣದಲ್ಲಿ ರಾತ್ರಿ ನಿಲ್ದಾಣಕ್ಕೂ ವ್ಯವಸ್ಥೆ ಆಗುತ್ತಿದ್ದು ಕೆಲವೇ ವರ್ಷಗಳಲ್ಲಿ ಈ ನಿಲ್ದಾಣ ಅಂತರಾಷ್ಟ್ರೀಯ ನಿಲ್ದಾಣ ಆಗುವುದರಲ್ಲಿ ಅನುಮಾನವಿಲ್ಲ ಎಂದರು.

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ದಿ ಸಚಿವ ಎಂ.ಬಿ ಪಾಟೀಲ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಶಿವಮೊಗ್ಗ, ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಕೆ ಎಸ್ ಈಶ್ವರಪ್ಪ, ಶಾಸಕ ಆರಗ ಜ್ಞಾನೇಂದ್ರ ಮುಂತಾದ ಗಣ್ಯರೊಂದಿಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಿಗ್ಗೆ 9.50ಕ್ಕೆ ಹೊರಟ ಚೊಚ್ಚಲ ವಿಮಾನವು 11.05ಕ್ಕೆ ಶಿವಮೊಗ್ಗಕ್ಕೆ ಬಂದಿಳಿಯುವುದರೊಂದಿಗೆ ಮಲೆನಾಡಿನಲ್ಲಿ ವಿಮಾನಯಾನದ ಹೊಸ ಅಧ್ಯಾಯ ಆರಂಭವಾಯಿತು.

ಶಿವಮೊಗ್ಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ವಾಟರ್ ಸೆಲ್ಯೂಟ್ ಮೂಲಕ ಸಂಭ್ರಮಾಚರಣೆ ಮಾಡಲಾಯಿತು. ಜೊತೆಗೆ ಬಂದಿಳಿದ ಎಲ್ಲ ಪ್ರಯಾಣಿಕರಿಗೂ ಸಚಿವ ಮಧು ಬಂಗಾರಪ್ಪ ಅವರಲ್ಲದೆ ವಿಮಾನ ನಿಲ್ದಾಣದ ಸಿಬ್ಬಂದಿ ಗುಲಾಬಿ ಹೂವು ಮತ್ತು ಸಿಹಿ ನೀಡಿ ಸ್ವಾಗತಿಸಿದರು.
ವಾಪಸ್ ಬೆಂಗಳೂರಿಗೆ ಹೊರಟ ವಿಮಾನದಲ್ಲಿ ಸಚಿವ ಎಂ.ಬಿ.ಪಾಟೀಲ ಜತೆ ಸಚಿವ ಮಧು ಬಂಗಾರಪ್ಪ ಪ್ರಯಾಣಿಸಿದರು.
ವಿಮಾನ ನಿಲ್ದಾಣ ನಿರ್ಮಾಣಕ್ಕೆ ಭೂಮಿ ನೀಡಿದ ರೈತರ ಪರವಾಗಿ ಇಬ್ಬರು ರೈತರನ್ನು ಸನ್ಮಾನಿಸಲಾಯಿತು.
ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಗೋಪಾಲಕೃಷ್ಣ ಬೇಳೂರು, ಆರಗ ಜ್ಞಾನೇಂದ್ರ ಶಾರದಾ ಪೂರ್ಯಾನಾಯ್ಕ, ವಿಧಾನ ಪರಿಷತ್ ಶಾಸಕರಾದ ರುದ್ರೇಗೌಡ, ಡಿ.ಎಸ್.ಅರುಣ್, ಭಾರತಿ ಶೆಟ್ಟಿ ಮಾಜಿ ಶಾಸಕ ಕೆ.ಎಸ್.ಈಶ್ವರಪ್ಪ, ಮೂಲಸೌಕರ್ಯ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಗೌರವ್ ಗುಪ್ತ, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್ ಸೆಲ್ವಕುಮಾರ್, ಕೆಎಸ್‍ಐಐಡಿಸಿ ವ್ಯವಸ್ಥಾಪಕ ನಿರ್ದೇಶಕ ಎಂ ಆರ್ ರವಿ, ಕಾರ್ಯನಿರ್ವಾಹಕ ನಿರ್ದೇಶಕ ಪ್ರಕಾಶ, ವಿಮಾನ ನಿಲ್ದಾಣದ ನಿರ್ದೇಶಕ ಕ್ಯಾ.ಶಮಂತ್, ಡಿಎಸ್‍ಪಿ ಚಂದ್ರಶೇಖರ್ ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ