ರಾಯಚೂರು ಜಿಲ್ಲೆಯ ಮುದಗಲ್ ಪಟ್ಟಣ ಸಮೀಪದ ರಾಮತ್ನಾಳ ಗ್ರಾಮದಲ್ಲಿ ಮಧ್ಯಾಹ್ನ ವೇಳೆ ಮನೆಗೆ ನುಗ್ಗಿದ ಕಳ್ಳರು ನಗದು ಹಾಗೂ ಬಂಗಾರ ದೋಚಿದ ಘಟನೆ ನಡೆದಿದೆ. ಗ್ರಾಮದ ಶಂಕರಗೌಡ ವಿರುಪಣ್ಣ ಇಟಗಿ ಅವರಿಗೆ ಸೇರಿದ ಮನೆಯಲ್ಲಿ ಕಳ್ಳತನ ನಡೆದಿದ್ದು, ಮನೆಯವರು ಹೊರಗಿದ್ದ ಸಂದರ್ಭ ನೋಡಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ.
ಮಧ್ಯಾಹ್ನ ಸಮಯದಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ಪ್ರವೇಶಿಸಿದ ದುಷ್ಕರ್ಮಿಗಳು ಎರಡು ಅಲಮಾರಿಗಳ ಬೀಗಗಳನ್ನು ಒಡೆದು ಒಳಗಿದ್ದ ನಗದು ಮತ್ತು ಚಿನ್ನಾಭರಣಗಳನ್ನು ಕಳವು ಮಾಡಿಕೊಂಡಿದ್ದಾರೆ. ಬಳಿಕ ಮನೆಗೆ ಬಂದ ಕುಟುಂಬದವರು ಅಲಮಾರಿಗಳು ಒಡೆದಿರುವುದನ್ನು ಗಮನಿಸಿ ಕಳ್ಳತನ ನಡೆದಿರುವುದು ತಿಳಿದುಬಂದಿದೆ. ತಕ್ಷಣವೇ ಮುದಗಲ್ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಇನ್ನು ಎರಡು ತಿಂಗಳ ಹಿಂದಷ್ಟೇ ಇದೇ ಒಂದು ಗ್ರಾಮದ ಮನೆ ಒಂದರಲ್ಲಿ ಕಳ್ಳರು ಕಳ್ಳತನ ಮಾಡಿದ್ದರು. ಆಗಲು ಮನೆ ಮಾಲೀಕರು ಮುದುಗಲ್ ಪೊಲೀಸರಿಗೆ ದೂರು ನೀಡಿದ್ದರು. ಎರಡು ತಿಂಗಳಲ್ಲಿ ಯಾವುದೇ ಕ್ರಮ ಕೈಗೊಳ್ಳದೆ ಇರುವುದೇ ಮತ್ತೊಂದು ಕಳ್ಳತನಕ್ಕೆ ಕಾರಣ ಎಂದು ಮನೆ ಮಾಲೀಕರು ಅಸಮಾಧಾನ ಹೊರ ಹಾಕುತ್ತಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ. ಕಳ್ಳತನವಾದ ನಗದು ಹಾಗೂ ಬಂಗಾರದ ನಿಖರ ಪ್ರಮಾಣ ಇನ್ನೂ ತಿಳಿದುಬಂದಿಲ್ಲ. ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಚಲನವಲನಗಳ ಬಗ್ಗೆ ವಿಚಾರಣೆ ನಡೆಯುತ್ತಿದೆ. ಅಗತ್ಯವಿದ್ದರೆ ಬೆರಳಚ್ಚು ತಜ್ಞರನ್ನೂ ಕರೆಯಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಮಧ್ಯಾಹ್ನದ ವೇಳೆಯೇ ಈ ರೀತಿಯ ಕಳ್ಳತನ ನಡೆದಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಪ್ರಕರಣ ದಾಖಲಿಸಿಕೊಂಡಿರುವ ಮುದಗಲ್ ಪೊಲೀಸರು ಕಳ್ಳರ ಪತ್ತೆಗೆ ಬಲೆ ಬೀಸಿದ್ದು, ತನಿಖೆ ಮುಂದುವರಿದಿದೆ.