ಯಾದಗಿರಿ ಜಿಲ್ಲೆಯನ್ನು ಕುಷ್ಟರೋಗ ಮುಕ್ತ ಜಿಲ್ಲೆಯನ್ನಾಗಿ ಮಾಡುವ ಉದ್ದೇಶದಿಂದ ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿ ಜಾಗೃತಿಯನ್ನು ಮತ್ತಷ್ಟು ಬಲಪಡಿಸಬೇಕು ಎಂದು ಜಿಲ್ಲಾಧಿಕಾರಿ ಶ್ರೀ ಹರ್ಷಲ್ ಭೋಯರ್ ಅವರು ಸೂಚಿಸಿದರು.
ಅವರು ಯಾದಗಿರಿ ನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸ್ಪರ್ಶ ಕುಷ್ಟರೋಗ ಜಾಗೃತಿ ಅಭಿಯಾನ – ಜಿಲ್ಲಾ ಸಮನ್ವಯ ಸಮಿತಿ (DTF) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಹಾತ್ಮ ಗಾಂಧೀಜಿ ಅವರು ಕುಷ್ಟರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಪಟ್ಟಿದ್ದರು. ಅದೇ ದಿಸೆಯಲ್ಲಿ ಅಧಿಕಾರಿಗಳು ಹಾಗೂ ಆರೋಗ್ಯ ಸಿಬ್ಬಂದಿ ಸಮರ್ಪಕವಾಗಿ ಕೆಲಸ ಮಾಡಬೇಕೆಂದು ಹೇಳಿದರು.
ಸಭೆಯಲ್ಲಿ ಕುಷ್ಟರೋಗದ ಪ್ರಮುಖ ಲಕ್ಷಣಗಳ ಬಗ್ಗೆ ವಿವರಿಸಲಾಯಿತು. ಚರ್ಮದ ಮೇಲೆ ಬಿಳಿ ಅಥವಾ ಕಪ್ಪು ಮಚ್ಚೆಗಳು, ಸ್ಪರ್ಶ ಸಂವೇದನೆ ಕಡಿಮೆಯಾಗುವುದು, ಕೈ ಅಥವಾ ಕಾಲುಗಳಲ್ಲಿ ದೀರ್ಘಕಾಲದ ಗಾಯಗಳು, ಬೆರಳು ಮಡಚಿಕೊಳ್ಳುವುದು, ನರ ಸಂಬಂಧಿತ ಸಮಸ್ಯೆಗಳು ಕಾಣಿಸಿಕೊಂಡರೆ ತಕ್ಷಣವೇ ಹತ್ತಿರದ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯಬೇಕು ಎಂದು ಸಾರ್ವಜನಿಕರಿಗೆ ಸಲಹೆ ನೀಡಲಾಯಿತು. ಈ ಸಂದರ್ಭದಲ್ಲಿ ಜಾಗೃತಿ ಬಿತ್ತಿಪತ್ರಗಳನ್ನು ಬಿಡುಗಡೆ ಮಾಡಲಾಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಶ್ ಬಿರಾದಾರ್ ಅವರು ಮಾತನಾಡಿ, ಸ್ಪರ್ಶ ಕುಷ್ಟರೋಗ ಜಾಗೃತಿ ಅಭಿಯಾನವನ್ನು ಜನವರಿ 30ರಿಂದ ಫೆಬ್ರವರಿ 13ರವರೆಗೆ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ಕೆ ಎಲ್ಲಾ ಇಲಾಖೆಗಳ ಸಹಕಾರ ಹಾಗೂ ಸಾರ್ವಜನಿಕರ ಬೆಂಬಲ ಅಗತ್ಯವಿದೆ ಎಂದರು.
ಜಿಲ್ಲಾ ಕುಷ್ಟರೋಗ ನಿವಾರಣಾಧಿಕಾರಿ ಡಾ. ಸಂಜೀವ್ ಕುಮಾರ್ ರಾಯಚೂರಕರ ಅವರು ಮಾತನಾಡಿ, ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಿಬ್ಬಂದಿ ಮನೆಮನೆಗೆ ಭೇಟಿ ನೀಡಿ ಕುಷ್ಟರೋಗದ ಲಕ್ಷಣಗಳ ಪರಿಶೀಲನೆ ನಡೆಸಲಿದ್ದಾರೆ ಎಂದು ತಿಳಿಸಿದರು. ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.
ಸಭೆಯಲ್ಲಿ DPDO ಡಾ. ಮುಬಾಷೀರ್ ಹಮ್ಮದ್ ಸಾಜಿದ್, RCHO ಡಾ. ಮಲ್ಲಪ್ಪ, FWO ಡಾ. ಜ್ಯೋತಿ ಕಟ್ಟಿಮನಿ, THO ಡಾ. ಹಣಮಂತರಡ್ಡಿ, THO ಡಾ. ಆರ್.ವಿ. ನಾಯಕ್, ಡಾ. ಜಗನಾಥರಡ್ಡಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಇತರೆ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.