ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸಮೀಪ ನದಿ ನೀರಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಗುಂಡ್ಯ ಹೊಳೆಯ ಕೊಲ್ಕದಕಟ್ಟ ಡ್ಯಾಂ ಸಮೀಪ ಇಬ್ಬರು ವಿದ್ಯಾರ್ಥಿನಿಯರು ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಕುಟ್ರುಪಾಡಿ ಗ್ರಾಮದ ವಿಮಲಗಿರಿ ನಿವಾಸಿಗಳಾದ ಸುನಿತಾ(21), ಅರ್ಪಿತ್ರಾ(15) ಮೃತಪಟ್ಟವರು ಎಂದು ಹೇಳಲಾಗಿದೆ.
ಬೇಸಿಗೆ ರಜೆ ಹಿನ್ನೆಲೆಯಲ್ಲಿ ಸ್ನೇಹಿತರೊಂದಿಗೆ ನದಿಗೆ ಆಗಮಿಸಿದ್ದ ಐವರು ವಿದ್ಯಾರ್ಥಿನಿಯರು ಸ್ನಾನಕ್ಕಾಗಿ ನೀರಿಗೆ ಇಳಿದಿದ್ದಾರೆ. ಈ ವೇಳೆ ಇಬ್ಬರು ನದಿಯ ನೀರಿನ ಆಳ ತಿಳಿಯದೇ ಮುಂದೆ ಸಾಗಿ ಮುಳುಗಿದ್ದಾರೆ. ಜೊತೆಯಲ್ಲಿದ್ದವರು ಇಬ್ಬರನ್ನು ರಕ್ಷಿಸಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ ಎನ್ನಲಾಗಿದೆ.
ಮಾಹಿತಿ ತಿಳಿದ ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರ ನೆರವಿನಿಂದ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರ ತೆಗೆಯಲಾಗಿದೆ ಎಂದು ಹೇಳಲಾಗಿದೆ.