LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಳಕೆಗೆ ಸಿಗದ ಬಹುಮಹಡಿ ಪಾರ್ಕಿಂಗ್ ಕಟ್ಟಡ

ಶಿವಮೊಗ್ಗ ನಗರದ ಹೃದಯ ಭಾಗವಾದ ಹೂವಿನ ಮಾರುಕಟ್ಟೆ ಬಳಿ ಕೋಟಿ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ, ಬಹು ಮಹಡಿ ಪಾರ್ಕಿಂಗ್ ಕಟ್ಟಡ ಉದ್ಘಾಟನೆ ಗೊಂಡು ವರ್ಷವಾಗುತ್ತಾ ಬಂದರೂ ಇಲ್ಲಿಯವರೆಗೂ ಸಾರ್ವಜನಿಕ ಬಳಕೆಗೆ ಮುಕ್ತಗೊಂಡಿಲ್ಲ.
ನಗರದಲ್ಲಿ ವರ್ಷದಿಂದ ವರ್ಷಕ್ಕೆ, ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ಪಾರ್ಕಿಂಗ್ ಸಮಸ್ಯೆ ಉಲ್ಬಣಿಸುತ್ತಿದೆ. ಕೆಲ ರಸ್ತೆಗಳಲ್ಲಿ ವಾಹನಗಳ ಪಾರ್ಕಿಂಗ್ ಕಾರಣದಿಂದಲೇ, ಜನ - ವಾಹನ ಸಂಚಾರ ದುಸ್ತರವಾಗಿ ಪರಿಣಮಿಸುತ್ತಿದೆ. ಈ ಕಾರಣದಿಂದ ಸ್ಮಾರ್ಟ್ ಸಿಟಿ ಯೋಜನೆಯಡಿ, 25 ಕೋಟಿ ರೂ. ವೆಚ್ಚದಲ್ಲಿ ಮೂರು ಮಹಡಿಯ ಸುಸಜ್ಜಿತ ಕಟ್ಟಡ ನಿರ್ಮಿಸಲಾಗಿದೆ. ಸದರಿ ಕಟ್ಟಡದಲ್ಲಿ 172  ಕಾರುಗಳು ಹಾಗೂ 78 ದ್ವಿಚಕ್ರ ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.
ನೆಲ ಮಹಡಿಯಲ್ಲಿ 118 ಮಳಿಗೆಗಳನ್ನು ನಿರ್ಮಿಸಲಾಗಿದೆ. ಇವುಗಳನ್ನು ಹೂವು, ಹಣ್ಣು ಮಾರಾಟ ಮಾಡುತ್ತಿರುವ ವ್ಯಾಪಾರಿಗಳಿಗೆ ನೀಡಲು ನಿರ್ಧರಿಸಲಾಗಿದೆ. ಲಿಫ್ಟ್ ವ್ಯವಸ್ಥೆ ಸೇರಿದಂತೆ ಸಕಲ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.  ಮಳಿಗೆಗಳಿಗೆ ಬಾಡಿಗೆ ದರ ನಿಗದಿಗೊಳಿಸಿ, ವ್ಯಾಪಾರಿಗಳಿಗೆ ಹಂಚಿಕೆ ಮಾಡಬೇಕಾಗಿದೆ. ಉಳಿದಂತೆ ವಾಹನಗಳ ನಿಲುಗಡೆಗೆ ಟೆಂಡರ್ ಆಹ್ವಾನಿಸಿ, ಅರ್ಹ ಗುತ್ತಿಗೆದಾರರಿಗೆ ಅವಕಾಶ ಕಲ್ಪಿಸಬೇಕಾಗಿದೆ. ಆದರೆ ಇಲ್ಲಿಯವರೆಗೂ ಇವ್ಯಾವ ಕೆಲಸಗಳು ಆಗಿಲ್ಲವಾಗಿದೆ. ಇದರಿಂದ ಪ್ರತಿ ತಿಂಗಳು ಕಟ್ಟಡದಿಂದ ಬರಬಹುದಾಗಿದ್ದ ಲಕ್ಷಾಂತರ ರೂ. ಆದಾಯ ನಷ್ಟವಾಗುತ್ತಿದೆ.
ನಗರದ ಹಲವೆಡೆ ವಾಹನಗಳ ನಿಲುಗಡೆ ವ್ಯವಸ್ಥೆ ಅವ್ಯವಸ್ಥೆಯ ಆಗರವಾಗಿ ಪರಿಣ ಮಿಸುತ್ತಿದೆ. ವಾಹನಗಳ ನಿಲುಗಡೆಗೆ ಸೂಕ್ತ ವ್ಯವಸ್ಥೆ ಯಿಲ್ಲದೆ ಎಲ್ಲೆಂದರಲ್ಲಿ ವಾಹನಗಳ ನಿಲುಗಡೆ ಮಾಡಲಾಗುತ್ತಿದೆ. ಇದರಿಂದ ಸುಗಮ ಜನ - ವಾಹನ ಸಂಚಾರ ದುಸ್ತರವಾಗಿ ಪರಿಣಮಿಸಿದೆ. ಮತ್ತೊಂದೆಡೆ, ಕನ್ಸರ್’ವೆನ್ಸಿಗಳಲ್ಲಿ ವಾಹನಗಳ ನಿಲುಗಡೆ ಮಾಡುವ ಯೋಜನೆಯನ್ನೇ ಪಾಲಿಕೆ ಆಡಳಿತ ಮರೆತಿದೆ.  ನಗರದ ಹಲವೆಡೆ ಲಕ್ಷಾಂತರ ರೂ. ವೆಚ್ಚದಲ್ಲಿ ಅಭಿವೃದ್ದಿಗೊಳಿಸಲಾಗಿದ್ದ ಕನ್ಸರ್’ವೆನ್ಸಿಗಳು ಪಾಳು ಬೀಳುತ್ತಿರುವುದು, ಆಡಳಿತದ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ.
ಎಚ್ಚೆತ್ತುಕೊಳ್ಳಬೇಕಿದೆ:
ಬಹುಮಹಡಿ ಪಾರ್ಕಿಂಗ್ ಕಟ್ಟಡವನ್ನು, ಈಗಾಗಲೇ ಸ್ಮಾರ್ಟ್ ಸಿಟಿ ಆಡಳಿತವು ಮಹಾ ನಗರ ಪಾಲಿಕೆ ಆಡಳಿತಕ್ಕೆ ಹಸ್ತಾಂತರಿಸಿದೆ. ಇನ್ನಾದರೂ ಪಾಲಿಕೆ ಆಡಳಿತ, ಕಾಲಮಿತಿಯೊಳಗೆ ಸಾರ್ವಜನಿಕ ಬಳಕೆಗೆ ಕಟ್ಟಡ ಮುಕ್ತಗೊಳಿಸುವ ಕಾರ್ಯ ಮಾಡಬೇಕಿದೆ. ಇದರ ಜೊತೆಗೆ ಸವಾರ್‌ಲೇನ್ ರಸ್ತೆ ಗೌರವ್ ಲಾಜ್ ಎದುರು ಹೂವು- ಹಣ್ಣುಗಳ ಮಳಿಗೆ ನಿರ್ಮಿಸಿ ಜಿಲ್ಲಾ ಉಸ್ತುವಾರಿ ಸಚಿವರಿಂದಲೇ ಉದ್ಘಾಟನೆಯಾದರೂ ಅದಕ್ಕೂ ಇನ್ನೂ ಶೆಟರ್ ತೆರೆಯುವ ಭಾಗ್ಯ ಎದುರಾಗಿಲ್ಲ. ಎಲ್ಲಾ ವ್ಯವಸ್ಥೆ ಇಲ್ಲಿದ್ದರೂ, ವ್ಯಾಪಾರಿಗಳು ಮಳಿಗೆ ಪಡೆಯಲು ಕಾತರರಾಗಿದ್ದರೂ ಪಾಲಿಕೆ ಟೆಂಡರ್ ಪ್ರಕ್ರಿಯೆ ಮುಗಿದ್ದರೂ ಮುಂದಿನ ಹೆಜ್ಜೆ ಇಡದೆ  ಸುಮ್ಮನುಳಿದಿದೆ.  ಇದರಿಂದ ಪಾಲಿಕೆಗೆ ಆದಾಯ ಸಂಗ್ರಹಣೆಯಾಗುತ್ತಿತ್ತು.
ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಿರುವ, ಬಹುಮಹಡಿ ಪಾರ್ಕಿಂಗ್ ಕಟ್ಟಡವನ್ನು ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಲು ಕಾಂಗ್ರೆಸ್ ಮುಖಂಡರ ನಿಯೋಗ, ಮಹಾನಗರ ಪಾಲಿಕೆ ಆಯುಕ್ತರಿಗೆ  ಇತ್ತೀಚೆಗೆ ಮನವಿ ಸಲ್ಲಿಸಿದೆ.
ಬಿ.ಹೆಚ್.ರಸ್ತೆ, ಗಾಂಧಿ ಬಜಾರ್ ಸುತ್ತಮುತ್ತಲಿನ ಪ್ರಮುಖ ಸ್ಥಳಗಳಲ್ಲಿ ಜನ,  ವಾಹನ ಸಂಚಾರ ದಟ್ಟಣೆ ಹೆಚ್ಚಿದೆ. ವಾಹನಗಳ ನಿಲುಗಡೆ ಮಾಡಲು ಸವಾರರು ಪರದಾಡುವಂತಾಗಿದೆ. ಈ ಎಲ್ಲ ಕಾರಣಗಳಿಂದ ಕೋಟ್ಯಾಂತರ ರೂ. ವೆಚ್ಚದಲ್ಲಿ ಕಾರು ಹಾಗೂ ದ್ವಿಚಕ್ರ ವಾಹನಗಳ ನಿಲುಗಡೆಗೆ ಬಹುಮಹಡಿ ಕಟ್ಟಡ ನಿರ್ಮಿಸಲಾಗಿದೆ. ಕಟ್ಟಡ ಉದ್ಘಾಟನೆಗೊಂಡಿದ್ದರೂ ಇಲ್ಲಿಯವರೆಗೂ ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಿಲ್ಲ. ಇದರಿಂದ ಕಟ್ಟಡ ಹಾಳಾಗಲಾರಂಭಿಸಿದೆ. ಸದರಿ ಸ್ಥಳದಲ್ಲಿ ಕಾಲಮಿತಿಯೊಳಗೆ ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಬೇಕು.
-ರಮೇಶ್ ಹೆಗಡೆ, ಪಾಲಿಕೆ ಮಾಜಿ ಸದಸ್ಯ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST